ಬೆಂಗಳೂರು: ವಿಧಾನಸೌಧ, ಶಾಸಕರ ಭವನ, ರಾಜಭವನಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಹೊಸ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸದನಕ್ಕೆ ತಿಳಿಸಿದ್ದಾರೆ.
ಶುಕ್ರವಾರ ಬಜೆಟ್ ಮಂಡನೆ ವೇಳೆ ಆದ ಲೋಪ ದೋಷದ ಕುರಿತು ಮಾತನಾಡುವ ವೇಳೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಸದನಕ್ಕೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬಜೆಟ್ ಮಂಡನೆ ವೇಳೆ ತಿಪ್ಪೇರುದ್ರಪ್ಪ(76) ಎಂಬ ವ್ಯಕ್ತಿಯೋರ್ವ ದೇವದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಆಸನದಲ್ಲಿ ಕುಳಿತುಕೊಂಡಿದ್ದ. ಬಳಿಕ ಇದನ್ನು ಗಮನಿಸಿದ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಈ ವಿಚಾರವನ್ನು ನನ್ನ ಹಾಗೂ ಮಾರ್ಷಲ್ಗಳ ಗಮನಕ್ಕೆ ತಂದಿದ್ದಾರೆ.
ಇದನ್ನೂ ಓದಿ: ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿ ಪೇಚಿಗೆ ಸಿಲುಕಿದ ತರಕಾರಿ ವ್ಯಾಪಾರಿ
ಕೂಡಲೇ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಶಾಸಕನಲ್ಲ ಎಂದು ಬೆಳಕಿಗೆ ಬಂದಿದೆ. ಇಂತಹ ಲೋಪಗಳನ್ನು ತಡೆಯಲು ಅತ್ಯಾಧುನಿಕ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧ, ಶಾಸಕರ ಭವನ, ರಾಜಭವನಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗುವುದು.
ಇನ್ನು ಮುಂದೆ ನಾನು ಸೇರಿದಂತೆ ಎಲ್ಲಾ ಶಾಸಕರು ಗುರುತಿನ ಚೀಟಿಯನ್ನು ತೋರಿಸಿ ಸದನವನ್ನು ಪ್ರವೇಶಿಸಬೇಕು. ಈ ವಿಚಾರದಲ್ಲಿ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸದನಕ್ಕೆ ವಿನಂತಿಸಿಕೊಂಡಿದ್ದಾರೆ.