ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ ವಾಲ್ಮೀಕಿ ಸಮುದಾಯದ ಒಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ ಮಾಡಿದರು.
ನಮ್ಮ ಸಮುದಾಯಕ್ಕೆ ಒಂದು ಉಪ ಮುಖ್ಯಮಂತ್ರಿ ಹುದ್ದೆ ಕೊಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಇಬ್ಬರೂ ನಮ್ಮ ಸಮುದಾಯದ ಎರಡು ಕಣ್ಣುಗಳು. ಇಬ್ಬರಲ್ಲಿ ಯಾರಿಗಾದರೂ ಒಬ್ಬರಿಗೆ ಅವಕಾಶ ಮಾಡಿಕೊಡಿ ಎಂದು ಕೋರಿದ್ದೇನೆ ಎಂದು ಶ್ರೀಗಳು ಹೇಳಿದರು.
ನಾನು ಡಿಸಿಎಂ ಆಗಬೇಕು ಎಂದು ಬೇಡಿಕೆ ಇಟ್ಟಿಲ್ಲ: ನಾನು ಡಿಸಿಎಂ ಆಗಬೇಕು ಎಂದು ಸಿಎಂ ಮುಂದೆ ಬೇಡಿಕೆ ಇಟ್ಟಿಲ್ಲ. ಆದರೆ ನಮ್ಮ ಸಮಾಜ ಹಾಗೂ ಇತರರು ನಾನು ಡಿಸಿಎಂ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸಿಎಂ ಏನು ನಿರ್ಧಾರ ಮಾಡುತ್ತಾರೆ ಎಂದು ಕಾದುನೋಡಬೇಕು ಎಂದು ಸಚಿವ ಶ್ರೀರಾಮುಲು ಹೇಳಿದರು.
ಡಿಸಿಎಂ ಪದವಿಗಾಗಿ ವಾಲ್ಮೀಕಿ ಸಮುದಾಯದ ಬಿ.ವಿ.ಶ್ರೀರಾಮುಲು ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ನಡೆದಿದೆ. ಕಾಂಗ್ರೆಸ್ನಿಂದ ಬಿಜೆಪಿ ಬಂದ ರಮೇಶ್ ಜಾರಕಿಹೊಳಿಗೆ ಸಿಎಂ ಡಿಸಿಎಂ ಪದವಿ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಶ್ರೀರಾಮುಲು ಅವರಿಗೆ ಡಿಸಿಎಂ ಪದವಿ ಅನುಮಾನ ಎನ್ನಲಾಗುತ್ತಿದೆ. ಸಿಎಂ ಯಾರಿಗೆ ಪಟ್ಟ ನೀಡುತ್ತಾರೆ ಎಂಬುದ ರಹಸ್ಯವಾಗಿದೆ. (ದಿಗ್ವಿಜಯ ನ್ಯೂಸ್)