ಶಿರಸಿ: ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ನಗರವನ್ನು ಪ್ರವೇಶಿಸುವ ಮುಖ್ಯ ರಸ್ತೆಗಳು ಹಾಗೂ ನಗರ ಪ್ರದೇಶದಲ್ಲಿರುವ ರಸ್ತೆಗಳು ಹೊಂಡಮಯವಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನಗರ ಪ್ರವೇಶಿಸುವ ಹುಬ್ಬಳ್ಳಿ ರಸ್ತೆಯ ಚಿಪಗಿ ಸಮೀಪ ಹೆದ್ದಾರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಹೊಂಡಗಳು ನಿರ್ಮಾಣವಾಗಿವೆ. ಪ್ರತಿನಿತ್ಯ ಇದೇ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯಲ್ಲಿ ಬಿದ್ದ ಹೊಂಡದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸವಾರರಿಗೆ ವಾಹನ ಚಲಾಯಿಸುವುದೇ ಸವಾಲಾಗಿದೆ.
ವಾಹನ ಸವಾರರು ತುಸು ನಿರ್ಲಕ್ಷ್ಯತೋರಿದರೂ ಅಪಘಾತ ಸಂಭವಿಸುವ ಸಾಧ್ಯತೆ ಇಲ್ಲದಿಲ್ಲ. ಇಷ್ಟಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹೊಂಡ ಮುಚ್ಚುವ ಕಾರ್ಯ ಮಾಡದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ನಗರದಲ್ಲಿ ರಸ್ತೆ ವಿಸ್ತರಣೆ ಕಾರ್ಯ ನಡೆಯುತ್ತಿದ್ದು ಪಂಡಿತ್ ಸಾರ್ವಜನಿಕ ಆಸ್ಪತ್ರೆ ಎದುರು, ಐದು ರಸ್ತೆ ವೃತ್ತದ ಬಳಿ, ಅಶ್ವಿನಿ ವೃತ್ತ, ಅಗಸೇಬಾಗಿಲು ಸೇರಿ ಬಹುತೇಕ ಎಲ್ಲ ರಸ್ತೆಗಳೂ ಹೊಂಡಮಯವಾಗಿದೆ. ಹೊಂಡಗಳನ್ನು ತಪ್ಪಿಸಲು ಹೋಗಿ ದಿನನಿತ್ಯ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವ ಕೆಲಸ ಮಾಡಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ರಸ್ತೆಯಲ್ಲಿ ಉಂಟಾಗಿರುವ ಹೊಂಡಗಳನ್ನು ಮುಚ್ಚುವಂತೆ ಸೂಚಿಸಿದ್ದೇನೆ.
I ಭೀಮಣ್ಣ ನಾಯ್ಕ, ಶಾಸಕರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿ ವಾಹನ ಚಾಲನೆ ಮಾಡಲು ಹರಸಾಹಸಪಡುವಂತಾಗಿದೆ. ದ್ವಿಚಕ್ರ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಕ್ಷಣ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕು.
I ಸಚಿನ್ ಗೌಡರ, ವಾಹನ ಸವಾರ