ಕುಶಾಲನಗರ: ಪಟಾಕಿ ಮತ್ತು ಸಿಡಿಮದ್ದು ಸಿಡಿಸುವುದರಿಂದ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ ಆಗಲಿದೆ. ಇದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ, ಎಸ್ಡಿಎಂಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶನಿವಾರ ಗೋ ಗ್ರೀನ್ ಅಭಿಯಾನದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಟಾಕಿ ಸಿಡಿಸುವುದರಿಂದ ಶಬ್ದಮಾಲಿನ್ಯ ಮತ್ತು ವಾಯು ಮಾಲಿನ್ಯದ ಜತೆಗೆ ಪಕ್ಷಿ-ಪ್ರಾಣಿ ಹಾಗೂ ಪರಿಸರಕ್ಕೆ ಧಕ್ಕೆಯುಂಟಾಗುತ್ತದೆ. ಹೀಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಪಟಾಕಿಯನ್ನು ಬಿಟ್ಟು ಪರಿಸರ ಸ್ನೇಹಿ ಹಾಗೂ ಹಸಿರು ದೀಪಾವಳಿ ಆಚರಿಸಲು ಈ ಜಾಗೃತಿ ಆಂದೋಲನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಸಿಡಿಸುವ ಮೂಲಕ ಮಾಲಿನ್ಯ ಮುಕ್ತ ದೀಪಾವಳಿ ಆಚರಿಸಬೇಕಿದೆ. ನಾವು ಪ್ರಕೃತಿಗೆ ಯಾವುದೇ ಧಕ್ಕೆಯನ್ನುಂಟು ಮಾಡದೆ ಉತ್ತಮ ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಮನವಿ ಮಾಡಿದರು.
ಮಣ್ಣಿನ ಹಣತೆಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಸದಸ್ಯ ಕೆ.ಕೆ.ಭೋಗಪ್ಪ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಸಲಹೆಗಾರ ಕೆ.ಕೆ.ಪವನ್ ಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಎ.ಎಂ.ಜವರಯ್ಯ, ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ, ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತಾ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯಾ, ಎಂ.ಉಷಾ ಇತರರು ಇದ್ದರು.
ಹಸಿರು ದೀಪಾವಳಿ ಜಾಗೃತಿ ಅಭಿಯಾನ: ಕೂಡ್ಲೂರು ಗ್ರಾಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಣತೆ ಹಚ್ಚೋಣ, ಹಸಿರು ದೀಪಾವಳಿ ಆಚರಿಸೋಣ, ಪಟಾಕಿ ತ್ಯಜಿಸೋಣ ಮಾಲಿನ್ಯ ತಡೆಯೋಣ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ, ಪರಿಸರ ಸಂರಕ್ಷಿಸೋಣ ಬನ್ನಿ, ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು. ಶಿಕ್ಷಕರು ಮಕ್ಕಳಿಗೆ ಹಣತೆ ಹಚ್ಚೋಣ ಬನ್ನಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.