ವಿಜಯಪುರ: ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಜ. 21ರಂದು ಆಲಮಟ್ಟಿಯಲ್ಲಿರುವ ಕೆಬಿಜೆಎನ್ಎಲ್ ಮುಖ್ಯ ಅಭಿಯಂತರರ ಕಚೇರಿಗೆ ಬೀಗ ಜಡಿದು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.
ಮುಳವಾಡ ಏತ ನೀರಾವರಿ ಯೋಜನೆಯಡಿ ಮನಗೂಳಿ ಶಾಖಾ ಕಾಲುವೆಗೆ ನೀರು ಹರಿಸಬೇಕು. ಈಗಾಗಲೇ ಹಿಂಗಾರು ಬಿತ್ತನೆ ಮಾಡಿದ ಬೆಳೆಗಳಿಗೆ ನೀರಿಲ್ಲದೇ ನೆಲಕಚ್ಚಿವೆ. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪಂಚನದಿಗಳ ನಾಡು, ಕರ್ನಾಟಕದ ಪಂಜಾಬ್ ಎನಿಸಿಕೊಂಡಿರುವ ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಕೃಷಿ ಚಟುವಟಿಕೆಗಳಿಗೆ ನೀರು ಕೊಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಯರನಾಳ ವಿರಕ್ತಮಠದ ಸಂಗನಬಸವ ಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಬರ ಆವರಿಸಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಲಮಟ್ಟಿಯಿಂದ 40 ಕಿ.ಮೀ. ದೂರದ ವಿಜಯಪುರ ಜನರಿಗೆ ನೀರು ಸಿಗುತ್ತಿಲ್ಲ. ಆದರೆ ಆಂಧ್ರ ಪ್ರದೇಶದ ಜನರಿಗೆ ನೀರು ಲಭ್ಯವಾಗುತ್ತದೆ. ಇದೊಂದು ರೀತಿಯಲ್ಲಿ ಜನಪ್ರತಿನಿಧಿಗಳ ವೈಲ್ಯ, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಜಿಲ್ಲೆಯ ಜನರಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಆದ್ದರಿಂದ ಜಿಲ್ಲೆಯ ವಿವಿಧ ಮಠಾಧೀಶರ ನೇತೃತ್ವದಲ್ಲಿ ಆಲಮಟ್ಟಿಯಲ್ಲಿ ಕೆಬಿಜೆಎನ್ಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಹುಣಸ್ಯಾಳದ ಸಂಗನಬಸವ ಸ್ವಾಮೀಜಿ, ರೈತ ಮುಖಂಡರಾದ ಸದಾನಂದ ಬರಟಗಿ, ಸಿದ್ರಾಮ ಅಂಗಡಗೇರಿ ಇತರರಿದ್ದರು.