More

    ಕೋವಿಡ್ ಲಸಿಕೆ ನೀಡಲು ಸಕಲ ಸಿದ್ಧತೆ

    ವಿಜಯಪುರ: ಜಿಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಲಸಿಕೆ ನೀಡುವ ಕುರಿತಂತೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದರು.
    ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಮಾದರಿ ಲಸಿಕಾ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ, ಪೂರ್ವಾಭ್ಯಾಸ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಪ್ರಥಮ ಹಂತದಲ್ಲಿ ಜಿಲ್ಲೆಯ 15 ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ -19 ಲಸಿಕೆ ನೀಡುವ ಕುರಿತಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪ್ರತಿಯೊಂದು ಲಸಿಕಾ ಕೇಂದ್ರದಲ್ಲಿ ಐವರು ಅಧಿಕಾರಿಗಳನ್ನೊಳಗೊಂಡ ತಂಡಕ್ಕೆ ತರಬೇತಿ ನೀಡಲಾಗಿದೆ. ಅದಕ್ಕಾಗಿ ಮೂರು ಕೊಠಡಿಗಳನ್ನು ಸಿದ್ಧಪಡಿಸಲಾಗಿದ್ದು, ತಂತ್ರಾಂಶದಲ್ಲಿ ಅಪ್‌ಡೇಟ್, ಲಸಿಕೆ ನೀಡುವ ಕಾರ್ಯ ಹಾಗೂ ಲಸಿಕಾ ನಂತರ ಪರಿವೀಕ್ಷಣೆಗಾಗಿ ಪ್ರತ್ಯೇಕ ಕೊಠಡಿ ಕಾಯ್ದಿರಿಸಿ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
    ಜಿಲ್ಲೆಯ ಆರು ಸ್ಥಳಗಳಲ್ಲಿ ಪೂರ್ವಾಭ್ಯಾಸ ಹಮ್ಮಿಕೊಳ್ಳಲಾಗಿದ್ದು, ಕೋವಿಡ್-19 ಲಸಿಕೆ ಹೊರತುಪಡಿಸಿ ಇತರ ಎಲ್ಲ ಸೌಕರ್ಯಗಳನ್ನು ಕಲ್ಪಿಸಿ ಪೂರ್ವಾಭ್ಯಾಸ ನಡೆಸಲಾಗುತ್ತಿದೆ. ಚುನಾವಣಾ ಮಾದರಿಯಲ್ಲಿ ಸಿಬ್ಬಂದಿ ನಿಯೋಜನೆ, ತಂತ್ರಾಂಶದಲ್ಲಿ ಲಾನುಭವಿಗಳ ಹೆಸರು ಪರಿಶೀಲನೆ, ಕೋವಿಡ್ ಲಸಿಕೆ ನಂತರ ಆಗುವ ವ್ಯತರಿಕ್ತ ಪರಿಣಾಮಗಳ ಬಗ್ಗೆ ಪರಿಶೀಲಿಸಿ ಅಂತಹ ಪ್ರಕರಣ ಕಂಡುಬಂದಲ್ಲಿ ನಿಗದಿತ ಸಮಿತಿಯಲ್ಲಿ ಸಲಹೆ ಪಡೆದು ತಕ್ಷಣ ಆರೈಕೆ ಮಾಡುವ ಬಗ್ಗೆ ಪೂರ್ವಾಭ್ಯಾಸ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
    ನಿಗದಿತ ಸಿಬ್ಬಂದಿಯನ್ನು ಗುರುತಿಸಿ ಸೂಕ್ತ ಸೌಕರ್ಯಗಳ ವ್ಯವಸ್ಥೆ ಮತ್ತು ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಮೂರನೇ ಹಂತದಲ್ಲಿ ಬಹುಸಂಖ್ಯಾತ ಜನಸಂಖ್ಯೆಯನ್ನು ಗುರುತಿಸಲಾಗುತ್ತಿದ್ದು, ಮತದಾನ ಕೇಂದ್ರ ರೂಪದಲ್ಲಿ ಲಸಿಕಾ ಕೇಂದ್ರಗಳ ಸ್ಥಾಪನೆ ಮತ್ತು ಸರ್ಕಾರದಿಂದ ನೀಡಲಾಗುವ ಮಾನದಂಡಗಳ ಆಧಾರದ ಮೇಲೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಅವರು ತಿಳಿಸಿದರು.
    ಜಿಲ್ಲಾಸ್ಪತ್ರೆ ಸರ್ಜನ್ ಡಾ.ಶರಣಪ್ಪ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಡಾ.ಲಕ್ಕಣ್ಣನವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಬಿ ಬಿರಾದಾರ, ಡಾ. ಮುಕುಂದ ಗಲಗಲಿ, ಡಾ.ಮಹೇಶ ನಾಗರಬೆಟ್ಟ, ಡಾ.ಕವಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts