More

    ಗುಂಪು ಗುಂಪಾಗಿ ಸೇರಿದರೆ ಕಠಿಣ ಕ್ರಮ

    ವಿಜಯಪುರ: ಮಹಾಮಾರಿ ಕರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಲ್ಲಿದ್ದು, ಕೆಲವರು ಇದನ್ನು ನಿರ್ಲಕ್ಷಿಸಿ ಗುಂಪು ಗುಂಪಾಗಿ ಸೇರುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಕಾನೂನಿನ ರೀತ್ಯ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಎಚ್ಚರಿಸಿದ್ದಾರೆ.

    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೊನಾ ಮುನ್ನೆಚ್ಚರಿಕೆ ಕ್ರಮದ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದನ್ವಯ ನಿಗದಿತ ಪ್ರಮಾಣದ ಪಡಿತರ ಧಾನ್ಯಗಳನ್ನು ಜಿಲ್ಲಾದ್ಯಂತ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುತ್ತಿದೆ. ಕೆಲವು ಮುಖಂಡರು ಈ ಪರಿಸ್ಥಿತಿಯ ದುರ್ಲಾಭ ಪಡೆಯಲು ಬಡಜನರು ಮತ್ತು ಕೊಳಗೇರಿ ನಿವಾಸಿಗಳನ್ನು ಇನ್ನೂ ಹೆಚ್ಚಿನ ಪಡಿತರ ಧಾನ್ಯಗಳನ್ನು ನೀಡಬೇಕಾಗಿದೆ ಎಂದು ತಪ್ಪು ದಾರಿಗೆ ಎಳೆಯುವಂತಹ ಪ್ರಯತ್ನ ನಡೆಸುತ್ತಿದ್ದು, ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ -188, 269 ಹಾಗೂ ಇತರ ಸೂಕ್ತ ಕಾಯ್ದೆಯಡಿ ಪ್ರಕರಣ ದಾಖಲಾತಿಗೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

    ಅಪಾಯಕಾರಿ ಸಾಂಕ್ರಾಮಿಕ ಕರೊನಾ ನಿಯಂತ್ರಿಸುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಲಾಕ್‌ಡೌನ್ ಪಾಲಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ಆಯಾ ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡಿ ಪರಿಹಾರ ಕಂಡುಕೊಳ್ಳುವಂತೆ ಅವರು ಸಲಹೆ ನೀಡಿದರು.

    ಪಡಿತರ ವಿತರಣೆ

    ಜಿಲ್ಲಾದ್ಯಂತ ನ್ಯಾಯಬೆಲೆ ಅಂಗಡಿಗಳು ಕೂಡ ನಿಗದಿತ ಪ್ರಮಾಣದ ಪಡಿತರವನ್ನು ಮಾರ್ಗಸೂಚಿಯನ್ವಯ ವಿತರಿಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರು ಪಡಿತರ ಪಡೆಯಲು ಸೂಚಿಸಲಾಗಿದ್ದು, ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ದಿನಸಿ, ಹಣ್ಣು ತರಕಾರಿ ಮಾರಾಟ ಕುರಿತಂತೆಯೂ ತೀವ್ರ ನಿಗಾ ಇಡಲು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ಆಹಾರ ಇಲಾಖೆ ಅಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್‌ರು, ಗ್ರಾಮ ಲೆಕ್ಕಿಗರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿ ಸಿಬ್ಬಂದಿ ದಿನನಿತ್ಯ ಕಡ್ಡಾಯವಾಗಿ ಪರಿಶೀಲನೆ ಕೈಗೊಳ್ಳುವಂತೆ ಸೂಚಿಸಿದರು.

    ಪಡಿತರ ವಿತರಣೆಯಲ್ಲಿ ಲೋಪವೆಸಗುವ ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಸರ್ಕಾರದ ನಿರ್ದೇಶನದನ್ವಯ ರದ್ದುಗೊಳಿಸಲಾಗುತ್ತದೆ. ಕಾರಣ ಬಡಜನತೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿರುವ ಅವರು, ಈಗಾಗಲೇ ಲೋಪವೆಸಗುವ ನ್ಯಾಯಬೆಲೆ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸುವ ಪ್ರಕ್ರಿಯೆ ಜಾರಿಯಲ್ಲಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    1700 ಬೈಕ್ ವಶಕ್ಕೆ

    ಜಿಲ್ಲಾ ಪೊಲೀಸ್ ಅಧೀಕ್ಷಕ ಅನುಪಮ್ ಅಗರವಾಲ್ ಮಾತನಾಡಿ, ಜಿಲ್ಲಾದ್ಯಂತ 1700 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಿಂದ ಗಂಟಲುದ್ರವ ಮಾದರಿಗಳನ್ನು ಹೆಚ್ಚಿನ ರೀತಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದಾರೆ.
    ಜಿಪಂ ಸಿಇಒ ಗೋವಿಂದ ರೆಡ್ಡಿ ಅವರು ಲಾಕ್‌ಡೌನ್ ಇರುವ ಹಿನ್ನಲೆಯಲ್ಲಿ ಗುರುತಿನ ಚೀಟಿ ಆಧಾರದ ಮೇಲೆ ಅನಾವಶ್ಯಕ ಓಡಾಟದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಹೇಳಿದರು.
    ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಡಿಎಚ್‌ಒ ಡಾ. ಮಹೇಂದ್ರ ಕಾಪಸೆ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ.ಮುಕುಂದ ಗಲಗಲಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶರಣಪ್ಪ ಕಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಸುರೇಖಾ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಡಾ. ಧಾರವಾಡಕರ, ಡಾ. ಲಕ್ಕಣ್ಣವರ್, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಮತ್ತಿತರರಿದ್ದರು.

    ಗಡಿಭಾಗದಲ್ಲಿ ಕಟ್ಟೆಚ್ಚರ

    ಕರೊನಾ ಮುನ್ನೆಚ್ಚರಿಕೆಯಾಗಿ ಜಿಲ್ಲಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಗಡಿಭಾಗಗಳ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿಗಳಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ಮತ್ತು ಖಾಸಗಿ ಸಿಬ್ಬಂದಿ ಬೇರೆ ಜಿಲ್ಲೆಗಳಿಗೆ ದಿನನಿತ್ಯ ಹೋಗಿಬರುವಂತಹ ಓಡಾಟ ನಿರ್ಬಂಧಿಸಲಾಗಿದ್ದು, ಈ ಕುರಿತು ಸಂಬಂಧಪಟ್ಟ ಸಿಬ್ಬಂದಿ ಗಮನಿಸಬೇಕು. ವೈದ್ಯಕೀಯ ಕಾರಣಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ತಮಗೆ ಬೇಕಾದ ಔಷಧಗಳು ಲಭ್ಯವಿಲ್ಲದ ಬಗ್ಗೆ ಮುಚ್ಚಳಿಕೆ ನೀಡಬೇಕು. ಒಂದು ವೇಳೆ ಬೇರೆ ಜಿಲ್ಲೆಗೆ ಹೋಗಿ ಬಂದ ಸಂದರ್ಭದಲ್ಲಿ ಆ ವ್ಯಕ್ತಿಯು ಸಹ 14 ದಿನಗಳ ಕಾಲ ಕಡ್ಡಾಯವಾಗಿ ಕುಟುಂಬಸಮೇತ ಗೃಹಬಂಧನಕ್ಕೆ ಒಳಪಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

    ಜಿಲ್ಲೆಗೆ ಈವರೆಗೆ ವಿದೇಶ ಮತ್ತು ಇತರ ಕಡೆಯಿಂದ ಬಂದ 434 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. 247 ಜನ 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. 149 ಜನ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. 38 ಜನ ಗೃಹಬಂಧನದಲ್ಲಿದ್ದಾರೆ. ಈವರೆಗೆ ಕಳುಹಿಸಲಾದ 75 ಗಂಟಲುದ್ರವ ಮಾದರಿಗಳಲ್ಲಿ 63 ನೆಗೆಟಿವ್ ಲಿತಾಂಶ ಬಂದಿದೆ. ಇನ್ನೂ 12 ದ್ರವ ಮಾದರಿ ವರದಿ ಬರಬೇಕಾಗಿದ್ದು, ಇಂದು ಸಹ 10-12 ಗಂಟಲುದ್ರವ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗುತ್ತಿದೆ.
    ವೈ.ಎಸ್. ಪಾಟೀಲ, ಜಿಲ್ಲಾಧಿಕಾರಿ

    ಗುಂಪು ಗುಂಪಾಗಿ ಸೇರಿದರೆ ಕಠಿಣ ಕ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts