ವಿಜಯಪುರ: ನಗರದಲ್ಲಿರುವ 200ಕ್ಕೂ ಹೆಚ್ಚು ಬಿಡಾಡಿ ದನಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಪಶು ಸಂಗೋಪನೆ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ, ಕೃಷಿ, ಎಪಿಎಂಸಿ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅವರು, ಜಿಲ್ಲಾ ಪ್ರಾಣಿದಯಾ ಸಂಘ, ವಿಜಯಪುರ ಜೈನ್ ಅಸೋಸಿಯೇಷನ್, ನಗರದ ಪಾಂಜಾರಪೋಳ ಪದಾಧಿಕಾರಿಗಳ ಮೂಲಕ ನಗರದಲ್ಲಿ 200ಕ್ಕೂ ಹೆಚ್ಚು ಬಿಡಾಡಿ ದನಕರು ಇರುವ ಬಗ್ಗೆ ಸಮೀಕ್ಷೆ ನಡೆಸಿದ್ದು, ಕೋವಿಡ್-19 ಹಿನ್ನ್ನೆಲೆಯಲ್ಲಿ ಆಹಾರವಿಲ್ಲದೆ ತೊಂದರೆಗೆ ಈಡಾಗಬಾರದು. ಕಾರಣ ದಿನಕ್ಕೆ ಎರಡು ಬಾರಿ ಜಾನುವಾರುಗಳಿಗೆ ಮೇವು ಒದಗಿಸಬೇಕು. ಏ.14ರ ವರೆಗೆ ಲಾಕ್ಡೌನ್ ಅವಧಿಯಲ್ಲಿ ಉಚಿತವಾಗಿ ಮೇವನ್ನು ಒದಗಿಸಬೇಕು ಎಂದು ತಿಳಿಸಿದರು.
ರೈತರ ಸಮಸ್ಯೆಗೆ ಸ್ಪಂದಿಸಿ
ಕೋವಿಡ್-19ರ ಹಿನ್ನೆಲೆ ಕೃಷಿ ಚಟುವಟಿಕೆ ಹಾಗೂ ತೋಟಗಾರಿಕೆ ಉತ್ಪನ್ನಗಳ ಸಾಗಣೆ ಮತ್ತು ಮಾರಾಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರಿಂದ ಕೃಷಿ ಮತ್ತು ತೋಟಗಾರಿಕೆ ವಿಷಯಕ್ಕೆ ಸಂಬಂಧಿಸಿದ ದೂರು ಬಂದ ತಕ್ಷಣ ಸ್ಪಂದಿಸಬೇಕು. ಕೃಷಿ ಪರಿಕರಗಳು, ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಕ್ಕೆ ಸಂಬಂಧಪಟ್ಟ ದೂರುಗಳು ಮತ್ತು ತೋಟಗಾರಿಕೆ ಉತ್ಪನ್ನಗಳ ಬಗ್ಗೆ ದೂರು ಬಂದ ತಕ್ಷಣ ಆಯಾ ಹೋಬಳಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಭೇಟಿ ನೀಡಿ ರೈತರ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು.
ಜಿಪಂ ಸಿಇಒ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್, ಪ್ರಾಣಿ ದಯಾ ಸಂಘದ ಕಾರ್ಯದರ್ಶಿ ಹಾಗೂ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಪ್ರಾಣೇಶ ಜಾಹಗೀರದಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಶಿವಕುಮಾರ ಇತರರು ಉಪಸ್ಥಿತರಿದ್ದರು.