More

    ಕೌಶಲಾಧಾರಿತ ಶಿಕ್ಷಣ ಅಗತ್ಯ

    ವಿಜಯಪುರ: ಇಂದಿನ ಯುವ ಜನತೆಗೆ ಕೌಶಲಾಧಾರಿತ ಶಿಕ್ಷಣದ ಅವಶ್ಯಕತೆದ್ದು, ಅದಕ್ಕಾಗಿ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕೌಶಲ ಮಿಷನ್‌ನ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ ಮಿಷನ್‌ನ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

    ಸರ್ಕಾರದ ಅನುದಾನವನ್ನು ಸದ್ವಿನಿಯೋಗ ಮಾಡಿಕೊಂಡು, ಆ ಮೂಲಕ ಹೆಚ್ಚಿನ ಜನರಿಗೆ ಅನುಕೂಲವಾಗುವಂತೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಕೌಶಲ ಮಿಷನ್‌ನ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ಜಮೀನು ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೌಶಲ ಮಿಷನ್‌ನ ಇಲ್ಲಿಯವರೆಗಿನ ಕಾರ್ಯಗಳು ತೃಪ್ತಿದಾಯಕವಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿರುವುದು ಶ್ಲಾಘನೀಯ ಎಂದರು.

    ಅದೇ ರೀತಿ ಜನರಲ್ಲಿ ಇನ್ನಷ್ಟು ಜಾಗೃತಿಯನ್ನುಂಟು ಮಾಡಲು ಪ್ರಯತ್ನಿಸಬೇಕು. ಅದಕ್ಕಾಗಿ ಎನ್‌ಜಿಒಗಳ ಸಹಕಾರದೊಂದಿಗೆ ರಸಪ್ರಶ್ನೆ ಕಾರ್ಯಕ್ರಮಗಳಂತಹ ಜಾಗೃತಿ, ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ಮೂಲಕ ಜನರಲ್ಲಿ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಅರಿವು ಮೂಡಿಸಬೇಕು ಎಂದರು.

    ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಲ್ಲದೆ, ವಿದ್ಯಾರ್ಥಿಗಳು, ಯುವಜನರು ಇದರಲ್ಲಿ ಹೆಚ್ಚಿನ ಉತ್ಸುಕತೆಯಿಂದ ಪಾಲ್ಗೊಳ್ಳುವಂತಾಗಬೇಕು. ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ಕೈಗೊಳ್ಳಲಾಗುವ ತರಬೇತಿ ಕಾರ್ಯಕ್ರಮಗಳನ್ನು ಉತ್ತಮವಾಗಿ ಕೈಗೊಳ್ಳಬೇಕು. ಟಾಟಾ ಟೆಕ್ನಾಲಜಿ ಮೂಲಕ ಜಿಲ್ಲೆಯ 6 ಐಟಿಐ ಕಾಲೇಜುಗಳಲ್ಲಿ ಅತ್ಯಾಧುನಿಕ 4.0 ಕೋರ್ಸ್‌ಗಳ ಪ್ರವೇಶಾತಿ ಹೆಚ್ಚಲು, ಕೋರ್ಸ್‌ಗಳಿಗೆ ನೋಂದಣಿಯ ಪ್ರಮಾಣದಲ್ಲಿ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

    ಇಂಡಿ ತಾಲೂಕಿನ ಬಂಥನಾಳ ಗ್ರಾಮದ ಮಹಿಳಾ ವಿದ್ಯಾಪೀಠದ ಜಮೀನಿನ ಸುರಕ್ಷತೆಯ ದೃಷ್ಟಿಯಿಂದ ಕಾಂಪೌಂಡ್ ಗೋಡೆ ನಿರ್ಮಿಸುವ ಬಗ್ಗೆ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಕೆ. ಚವ್ಹಾಣ್, ಜಿಲ್ಲಾ ಕೌಶಲ ಮಿಷನ್ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts