ವಿಜಯಪುರ: ಅಲ್ಪಸಂಖ್ಯಾತರ ಅರ್ಹ ಲಾನುಭವಿಗಳಿಗಾಗಿ ಇರುವಂಥ ಯೋಜನೆಗಳ ಲಾಭವನ್ನು ಸಕಾಲಕ್ಕೆ ದೊರಕಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಟಾನ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಆವಾಸ ಯೊಜನೆಯಡಿ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿಪಂ ಮುಖ್ಯ ಯೋಜನಾಧಿಕಾರಿಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬೌತಿಕ ಗುರಿಗೆ ತಕ್ಕಂತೆ ಆರ್ಥಿಕ ಪ್ರಗತಿ ಸಾಧಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸಕಾಲಕ್ಕೆ ವೇತನ ಪಾವತಿಸಬೇಕು. ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಇರುವ ಶಿಷ್ಯವೇತನ ಸಕಾಲಕ್ಕೆ ತಲುಪಿಸುವಂತೆ ಸೂಚಿಸಿದರು.
ಉರ್ದು ಶಾಲೆ ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಇನ್ನಷ್ಟು ಸುಧಾರಿಸಬೇಕು. ಶೈಕ್ಷಣಿಕ ಸುಧರಣೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ನೆರವಾಗುವಂಥ ಕಾರ್ಯಕ್ರಮ ಶಿಕ್ಷಣ ಇಲಾಖೆ ಮೂಲಕ ಹಮ್ಮಿಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಆಧಾರಲಿಂಕ್ ಮತ್ತು ಇತರ ಕಾರಣಗಳಿಂದ 1346 ಮಕ್ಕಳಿಗೆ ಶಿಷ್ಯವೇತನ ತಲುಪಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಪ್ರತಿ ಮಗುವನ್ನು ತಮ್ಮ ಮಗುವಿನಂತೆ ಭಾವಿಸಿ ಸೌಲಭ್ಯ ಕಲ್ಪಿಸಬೇಕು. ಆಯಾ ಶಾಲೆ ವಿದ್ಯಾರ್ಥಿಗಳ ಮುಖ್ಯೊಪಾಧ್ಯಾಯರನ್ನು ಹೊಣೆಗಾರರನ್ನಾಗಿ ಮಾಡುವುದರ ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ತಾಲೂಕು ವ್ಯಾಪ್ತಿಯಲ್ಲಿ 6 ರಿಂದ 10ನೇ ತರಗತಿ ಹಾಗೂ ಪಿಯುಸಿ ಕಾಲೇಜ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ದೊರೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಪರಿಸ್ಥಿತಿಯಲ್ಲಿ ಅನುದಾನ ಲ್ಯಾಪ್ಸ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದರು.
ಅಲ್ಪಸಂಖ್ಯಾತರಿಗಾಗಿ ಇರುವ ಯೋಜನೆಗಳ ಕುರಿತ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಸಿದ್ದಪಡಿಸಿದ ವಿಶೇಷ ಲೇಖನಗಳನ್ನು ಒಳಗೊಂಡ ಕಿರು ಮಾಹಿತಿ ಪುಸ್ತಕವನ್ನು ಹೊರತರಬೇಕು. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಸಂಪಾದಕತ್ವದಲ್ಲಿ ವಿವಿಧ ಸಲಹಾ ಸಮಿತಿ ರಚಿಸಿಕೊಂಡು ಲೇಖನಗಳ ಪರಿಶೀಲನೆ ಆಧಾರದ ಮೇಲೆ ಕೈಪಿಡಿಯಲ್ಲಿ ಲೇಖನ ಪ್ರಕಟಿಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ಅವರು ಸೂಚಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರ, ಕಟ್ಟಡ ಕಾರ್ಮಿಕರ ನೋಂದಣಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಶೈಕ್ಷಣಿಕ ಗುಣಮಟ್ಟ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಅನುಪಮ ಅಗರವಾಲ ಮತ್ತಿತರರು ಇದ್ದರು.