ವಿಜಯಪುರ : ದೇಶದ ಜನರಿಗೆ ಉದ್ಯೋಗ ನೀಡುವಲ್ಲಿ ವಿಫಲಗೊಂಡಿರುವ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಅಭಿಯಾನ ನಡೆಸುತ್ತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಾದರ್ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಉದ್ಯೋಗ ನೀಡಿ, ಆತ್ಮಹತ್ಯೆ ನಿಲ್ಲಿಸಿ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಉದ್ಯೋಗ ನೀಡುವಲ್ಲಿ ವಿಲರಾಗಿದ್ದಾರೆ. ಉದ್ಯೋಗ ಇಲ್ಲದೆ ಯುವಕರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದೇಶದ ಬೆನ್ನೆಲುಬು ಎಂದು ಹೇಳುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಉದ್ಯೋಗ ಕಲ್ಪಿಸುವಲ್ಲಿ ಸಂಪೂರ್ಣ ವಿಫಲಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರೊನಾದಿಂದಾಗಿ ದೇಶದ ಆರ್ಥಿಕತೆ ಕುಸಿದಿದೆ. ಉದ್ಯೋಗ ಇಲ್ಲದೆ ದೇಶದ ಜನರು ಒಂದು ಹೊತ್ತು ಊಟಕ್ಕೆ ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಅನೇಕ ಕಂಪನಿಗಳು ಬಾಗಿಲು ಮುಚ್ಚಿವೆ. ಸ್ವಾತಂತ್ರೃ ನಂತರ ಇದೇ ಮೊದಲ ಬಾರಿಗೆ ಇಂತಹ ಸಂದಿಗ್ಧ ಪರಿಸ್ಥಿತಿ ಉಲ್ಬಣಿಸಿದೆ. ಇದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಮಿಸ್ಡ್ಕಾಲ್ ಮಾಡಿ
ಉದ್ಯೋಗ ನೀಡಿ, ಆತ್ಮಹತ್ಯೆ ನಿಲ್ಲಿಸಿ ಅಭಿಯಾನವನ್ನು ಕಾಂಗ್ರೆಸ್ ರೂಪಿಸಿದ್ದು, ಅದಕ್ಕಾಗಿ ನಿರುದ್ಯೋಗಿ ಯುವಜನರು 7998799854 ನಂಬರ್ಗೆ ಮಿಸ್ಡ್ ಕಾಲ್ ಮಾಡುವ ಮೂಲಕ ಅಭಿಯಾನಕ್ಕೆ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಸಂಗನಗೌಡ ಛಾಯಾಗೌಡ ,ವಸಂತ ಹೊನಮೋಡೆ, ಹಸನಪಟೇಲ್, ಮೋಯಿನ ಶೇಖ ಇತರರಿದ್ದರು.