ವಿಜಯಪುರ: ಕರೊನಾ ಸಾಂಕ್ರಾಮಿಕ ಕಾಯಿಲೆಯಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಸಾರ್ವಜನಿಕರೊಂದಿಗೆ ಬೆರೆಯುವುದರ ಜತೆಗೆ ರಕ್ಷಣೆಗೆ ಶ್ರಮಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೋಮವಾರದಿಂದ ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಅನುಪಮ್ ಅಗರವಾಲ್ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಎಸ್ಒಪಿ ಬಿಡುಗಡೆ ಸಮಾರಂಭ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರೊನಾ ಸಾಂಕ್ರಮಿಕ ರೋಗದ ವಿರುದ್ಧ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಇಂದಿನಿಂದ ಜಾರಿಗೆ ತಂದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ವಿಭಿನ್ನವಾಗಲಿದೆ ಎಂದರು.
ಈ ಜಿಲ್ಲಾ ಪ್ರಮಾಣಿತ ಕಾರ್ಯಾಚರಣೆ ವಿಧಾನ ಅಂಗವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ. ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ದೂರುಗಳಿಗೆ, ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳು ಸೇರಿದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ತಮ್ಮ ಸುರಕ್ಷತೆಯು ಗಮನದಲ್ಲಿಡುವ ಅಗತ್ಯವಿದೆ. ಕಾರಣ ಈ ವಿಧಾನ ಕರೊನಾ ಪರಿಸ್ಥಿತಿಯ ಈ ಸಂದರ್ಭದಲ್ಲಿ ಹೆಚ್ಚು ನೆರವಾಗಲಿದೆ ಎಂದರು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಸಾರ್ವಜನಿಕರು ಸಮಾಜದಲ್ಲಿ ನೆಮ್ಮದಿ ಬದುಕು ಸಾಗಿಸಲು ಎಲ್ಲರೂ ನೀಡುತ್ತಿರುವ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮ ಅರಸಿದ್ದಿ ಅವರನ್ನು ಸ್ವಾಗತಿಸಲಾಯಿತು. ಜಿಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಇದ್ದರು.