More

    ಹಳ್ಳಿಗಳಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಬಲಪಡಿಸಿ

    ವಿಜಯಪುರ: ಗ್ರಾಮೀಣ ಪ್ರದೇಶಗಳಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪೊಲೀಸ್ ಇಲಾಖೆಯ ಬೀಟ್ ಸಿಬ್ಬಂದಿ ಆಯಾ ಗ್ರಾಮಗಳಲ್ಲಿ ನಿರಂತರ ಪರಿಶೀಲನೆ ನಡೆಸಬೇಕು. ಜನರು ಗುಂಪಾಗಿ ಸೇರುವುದನ್ನು ತಡೆಯಬೇಕು. ಸರ್ಕಾರದ ನಿಯಮಾವಳಿಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.

    ನಗರದ ನೂತನ ಪ್ರವಾಸಿ ಮಂದಿರದಲ್ಲಿ ಸೋಮವಾರ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕರೊನಾ ನಿಯಂತ್ರಣ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕರೊನಾ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ದಿಸೆಯಲ್ಲಿ ಈಗಾಗಲೇ ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಪಂ ಸದಸ್ಯರನ್ನು ಒಳಗೊಂಡ ಕಾರ್ಯ ಪಡೆಗಳು ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಸೂಕ್ತ ರೀತಿಯಲ್ಲಿ ನೆರವಾಗುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಕರೊನಾ ಲಕ್ಷಣಗಳು ಕಂಡು ಬಂದ ತಕ್ಷಣ ಕಾಳಜಿ ಕೇಂದ್ರಕ್ಕೆ ಕಳುಹಿಸಬೇಕು. ಪೊಲೀಸ್ ಬೀಟ್ ಸಿಬ್ಬಂದಿ ನಿರಂತರ ಭೇಟಿ ನೀಡುವ ಮೂಲಕ ಕಾರ್ಯ ಪಡೆಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ಕರೊನಾ ರೋಗಿಗಳು ಗ್ರಾಮೀಣ ಪ್ರದೇಶದಲ್ಲಿ ನಿರಾತಂಕವಾಗಿ ಓಡಾಡುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಅಂತಹ ರೋಗಿಗಳ ಮೇಲೆ ನಿಗಾ ಇರಿಸಿ ಅವರನ್ನು ಕಾಳಜಿ ಕೇಂದ್ರಕ್ಕೆ ಸೇರ್ಪಡೆಗೊಳಿಸಬೇಕೆಂದರು.

    ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟಿತ ಪ್ರಯತ್ನದ ಮೂಲಕ ಕರೊನಾ ಹತೋಟಿಗೆ ತರಲು ಪ್ರಯತ್ನಿಸೋಣ ಎಂದ ಅವರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಅತ್ಯುತ್ತಮವಾಗಿ ಸೇವೆ ಸಲ್ಲಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

    ಲಾಕ್‌ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಡುವವರ ಮೇಲೆ ಕ್ರಮ ಆಗಬೇಕು. ರೈತರು, ಸಕಾರಣ ಹೊಂದಿದವರಿಗೆ ತೊಂದರೆ ಆಗದಂತೆ ಮಾನವೀಯತೆಯ ಮೇಲೆ ಪಾರದರ್ಶಕವಾಗಿ ನೆರವಾಗಲು ಕಾರ್ಯನಿರ್ವಹಿಸಬೇಕು. ತಳ್ಳುವ ಗಾಡಿ ವ್ಯಾಪಾರಸ್ಥರ ಬಗ್ಗೆಯೂ ಮಾನವೀಯತೆಯ ನೆಲೆಯ ಮೇಲೆ ನೋಡಿಕೊಳ್ಳುವಂತೆ ಸಚಿವೆ ಜೊಲ್ಲೆ ಸಲಹೆ ನೀಡಿದರು.

    ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿ, ಭೀಮಾ ನದಿ ಪಾತ್ರದಲ್ಲಿ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಹೆಚ್ಚಿನ ನಿಗಾ ಇಡಲು ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು ಎಂದರು.

    ಎಸ್‌ಪಿ ಅನುಪಮ ಅಗರವಾಲ್ ಮಾತನಾಡಿ, ಪೊಲೀಸ್ ಇಲಾಖೆಯ ಹೆಚ್ಚಿನ ಅಧಿಕಾರಿ, ಸಿಬ್ಬಂದಿ ಪ್ರಥಮ ಹಾಗೂ ದ್ವಿತೀಯ ಹಂತದ ಕರೊನಾ ಲಸಿಕೆ ಪಡೆದಿರುವುದರಿಂದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಜಿಲ್ಲೆಯಲ್ಲಿ ಲಾಕ್‌ಡೌನ್ ಆರಂಭವಾದಾಗಿನಿಂದ 25 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ 3 ಶಿಫ್ಟ್‌ಗಳಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. 4 ಕಡೆ ವಿಜಯಪುರ ಉಪವಿಭಾಗದ ಹಾಗೂ 7 ಇಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ಮಾಡಲಾಗುತ್ತಿದೆ. ಅಂತರ ರಾಜ್ಯ ಗಡಿಯಲ್ಲಿ ವಲಸೆ ಪ್ರಮಾಣ ಈಗ ಕಡಿಮೆಯಾಗಿದೆ ಎಂದರು.

    ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts