More

    ಸುರಕ್ಷೆ-ಸುವ್ಯವಸ್ಥೆ-ಪಾರದರ್ಶಕತೆಗೆ ಒತ್ತು

    ವಿಜಯಪುರ: ಕರೊನಾ ಹಾವಳಿ ನಡುವೆಯೇ ಜೂ.25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಸುರಕ್ಷತೆ, ಸುವ್ಯವಸ್ಥೆ ಹಾಗೂ ಪಾರದರ್ಶಕತೆಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಅವಕಾಶ ಕಲ್ಪಿಸಲಾಗಿದೆ.
    ಜು.4 ರವರೆಗೆ ನಡೆಯಲಿರುವ ಪರೀಕ್ಷೆಗಳನ್ನು ನಕಲು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. 106 ಮುಖ್ಯ ಪರೀಕ್ಷಾ ಕೇಂದ್ರ ಹಾಗೂ 15 ಉಪ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 121 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 37,122 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ನಗರದಲ್ಲಿ ಮಾತ್ರ ಬಾಹ್ಯ ವಿದ್ಯಾರ್ಥಿಗಳ 4 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
    ಸುದ್ದಿಗಾರರಿಗೆ ಪರೀಕ್ಷೆ ವಿವರ ನೀಡಿರುವ ಅವರು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ 144 ಕಲಂ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಝರಾಕ್ಸ್, ಕಂಪ್ಯೂಟರ್, ಇಂಟರ್‌ನೆಟ್ ಕೆೆ, ಕೋಚಿಂಗ್ ಸೆಂಟರ್‌ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಸಿಬ್ಬಂದಿಗ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಕಂಪೌಂಡ್ ಒಳಗಡೆ ಅವಕಾಶ ಇರುವುದಿಲ್ಲ. ಗುಂಪುಗುಂಪಾಗಿ ಸೇರಲು ನಿಷೇಧವಿದ್ದು, ಪಾಲಕರು, ಸಾರ್ವಜನಿಕರು ಮಕ್ಕಳಿಗೆ ಪರೀಕ್ಷಾ ಸಮಯದಲ್ಲಿ ಬಿಟ್ಟು ತೆರಳಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

    ಸಿಸಿ ಕ್ಯಾಮೆರಾ ಅಳವಡಿಕೆ

    ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಖಾಸಗಿ, ಸರ್ಕಾರಿ ಶಾಲೆ ಪದಾಧಿಕಾರಿಗಳು, ಆಡಳಿತ ಮಂಡಳಿ, ಎಸ್‌ಡಿಎಂಸಿ ಮತ್ತು ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಯಾರಾದರೂ ಮೊಬೈಲ್ ತಂದಲ್ಲಿ ಆಯಾ ಪರೀಕ್ಷಾ ಕೇಂದ್ರಗಳ ಮೊಬೈಲ್ ಸ್ವಾಧೀನಾಧಿಕಾರಿಗಳಿಗೆ ಒಪ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ (ಟಿವಿ) ಕ್ಯಾಮೆರಾ, ಮೂರು ಅಡಿ ಅಂತರದೊಂದಿಗೆ ಮಕ್ಕಳಿಗೆ ಆಸನದ ವ್ಯವಸ್ಥೆ ಪ್ರತಿಯೊಂದು ಡೆಸ್ಕ್‌ಗೆ ಇಬ್ಬರು ವಿದ್ಯಾರ್ಥಿಗಳು ಒಳಗೊಂಡಂತೆ ಪ್ರತಿ ಬ್ಲಾಕ್‌ದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 20 ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಸಹ ನೇಮಿಸಲಾಗಿದೆ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಲೌಡ್‌ಸ್ಪೀಕರ್ (ಧ್ವನಿವರ್ಧಕ) ಮೂಲಕ ಮಾಹಿತಿ ನೀಡಲಾಗುತ್ತದೆ. ಅದರಂತೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿವಾರಣೆಗೆ ಜಿಲ್ಲಾಮಟ್ಟ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ, ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.

    ಮಾಸ್ಕ್ ವಿತರಣೆ

    ಮುನ್ನೆಚ್ಚರಿಕೆಯಾಗಿ ಈಗಾಗಲೇ ವಿವಿಧ ಜನಪ್ರತಿನಿಧಿಗಳು ಮತ್ತು ಟ್ರಸ್ಟ್‌ಗಳಿಂದ ಪೂರೈಸಿದ 1 ಲಕ್ಷ ಮಾಸ್ಕ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕಂಟೇನ್ಮೆಂಟ್ ವಲಯದಿಂದ ಬರುವ ಮಕ್ಕಳಿಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಿದ್ದು, ಎನ್-95 ಮಾಸ್ಕ್‌ಗಳ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಕ್ಕೆ ಬರಲು 147 ಬಸ್‌ಗಳ ವ್ಯವಸ್ಥೆ ಸಹ ಇದ್ದು, 107 ರೂಟ್‌ಗಳಲ್ಲಿ ಬಸ್‌ಗಳು ಸಂಚರಿಸಲಿವೆ. ಅದರಂತೆ ಖಾಸಗಿ ಶಾಲೆಗಳ ಮೂಲಕ ಆಯಾ ವಿದ್ಯಾರ್ಥಿಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು 141 ಖಾಸಗಿ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ. ಕಂಟೇನ್ಮೆಂಟ್ ವಲಯದಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು. ಹಾಜರಾಗದಿದ್ದಲ್ಲಿ ಮುಂದಿನ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.

    ಮುನ್ನೆಚ್ಚರಿಕೆ ಕ್ರಮ

    ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕರೊನಾ ಕುರಿತ ಮುನ್ನೆಚ್ಚರಿಕೆ ಮಾಹಿತಿ ನೀಡುವ ಪೋಸ್ಟರ್‌ಗಳನ್ನು ಲಗತ್ತಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಮತ್ತು ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಒಂದು ವೇಳೆ ಪರೀಕ್ಷಾ ಕೇಂದ್ರದಲ್ಲಿ ಆಕಸ್ಮಿಕವಾಗಿ ಕರೊನಾ ಪ್ರಕರಣಗಳು ಕಂಡುಬಂದಲ್ಲಿ ಪ್ರತಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಿದ ಕೇಂದ್ರಗಳೆಂದು ಗೊತ್ತುಪಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಕ್ಲಾಸ್-2 ಸ್ಥಳೀಯ ಜಾಗೃತದಳವೆಂದು ನೇಮಿಸಲಾಗಿದೆ. ಅದರಂತೆ ತಲಾ ಒಬ್ಬರು ತಾಲೂಕು ವೀಕ್ಷಕರನ್ನು ನಿಯೋಜಿಸಿದೆ. ಪ್ರತಿ ಕೇಂದ್ರದಲ್ಲಿ ಹೆಲ್ತ್ ಕೌಂಟರ್ ತೆರೆಯಲಾಗುತ್ತಿದ್ದು, ವೈದ್ಯರು, ಆರೋಗ್ಯ ಸಹಾಯಕರು ಇರಲಿದ್ದು, ಥರ್ಮಲ್ ಸ್ಕ್ರೀನಿಂಗ್, ಮಕ್ಕಳಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

    ಸಹಾಯವಾಣಿ

    ವಿದ್ಯಾರ್ಥಿಗಳು ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಡಿಡಿಪಿಐ ಸಿ.ಪ್ರಸನ್ನ ಕುಮಾರ (ಮೊ. 9448999331), ಇಒ ಎಸ್.ಎ. ಮುಜಾವರ (ಮೊ.9483460011), ಎಸ್‌ಐ ಪಿ.ಕೆ. ಬಿರಾದಾರ(ಮೊ.9740314500) ಹಾಗೂ ಎಎಎಲ್ ಬಿಇಒಗಳಾದ ಬಾಗೆವಾಡಿ ಬಿಇಒ (ಮೊ.9480695092), ಬಿಇಒ ವಿಜಯಪುರ ಗ್ರಾಮೀಣ (ಮೊ.9480695093), ಬಿಇಒ ವಿಜಯಪುರ ನಗರ (ಮೊ.9480695094), ಬಿಇಒ ಚಡಚಣ (ಮೊ.9480695095), ಬಿಇಒ ಇಂಡಿ(ಮೊ.9480695096), ಬಿಇಒ ಮುದ್ದೇಬಿಹಾಳ (ಮೊ.9480695097), ಬಿಇಒ ಸಿಂದಗಿ (ಮೊ.9480695098) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

    ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ, ಜಿಪಂ ಸಿಇಒ, ಎಸ್‌ಪಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಸ್ಟಾೃಂಡರ್ಡ್ ಆಪರೇಟಿಂಗ ಪ್ರೊಸಿಜರ್ (ಎಸ್‌ಒಪಿ) ರನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ರಾಷ್ಟ್ರೀಯ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಹಯೋಗದೊಂದಿಗೆ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲಾಗುವುದು.
    ವೈ.ಎಸ್. ಪಾಟೀಲ, ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts