ವಿಜಯಪುರ: ಭಾರತದಲ್ಲಿ ಬಹುಪಾಲು ಜನರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಾರೆ. ಅವರ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಂ.ಎಸ್. ಬಿರಾದಾರ ಹೇಳಿದರು.
ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಬಿಎಲ್ಡಿಇ ಆಸ್ಪತ್ರೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ, ಅವರು ಮಾತನಾಡಿದರು.
ಆರೋಗ್ಯ, ನೈರ್ಮಲ್ಯ, ಶಿಕ್ಷಣದ ಸೇವೆಗಳನ್ನು ಜಾರಿ ತರುವ ಮೂಲಕ ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ನಮ್ಮ ಆಸ್ಪತ್ರೆಯಿಂದ ಉಕ್ಕಲಿ ಗ್ರಾಮವಲ್ಲದೆ ದೇಗಿನಾಳ, ಡೋಣೂರ, ಯಂಭತ್ನಾಳ, ಹೆಗಡಿಹಾಳ ಗ್ರಾಮಗಳಲ್ಲಿ ಶಿಬಿರ ಏರ್ಪಡಿಸಲಾಗಿದೆ ಎಂದರು. ಶಿಬಿರದಲ್ಲಿ ಒಟ್ಟು 672ರೋಗಿಗಳಿಗೆ ಆರೋಗ್ಯ ತಪಾಸಣೆಗೊಳಪಡಿಸಿ, ಔಷಧ ವಿತರಿಸಲಾಯಿತು. ಹೆಚ್ಚಿನ ಚಿಕಿತ್ಸೆ ಹಾಗೂ ಶಸಚಿಕಿತ್ಸೆ ಒಳಪಡುವ 276 ರೋಗಿಗಳನ್ನು ವಿಜಯಪುರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಲಾಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಅಣ್ಣಾಸಾಹೇಬ ಪಾಟೀಲ, ಡಾ.ಮಂಜುನಾಥ ಕೋಟೆನವರ, ಉನ್ನತ ಭಾರತ ಅಭಿಯಾನದ ಸಂಯೋಜಕ ಡಾ.ಪ್ರವೀಣ ಗಂಗನಹಳ್ಳಿ, ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥೆ ಡಾ.ಶೈಲಜಾ ಪಾಟೀಲ, ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಎಸ್.ಆರ್.ಮುದನೂರ, ಡಾ.ಶಾರದಾ ರಾಠೋಡ, ಗ್ರಾಮಸ್ಥರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.