ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ನ.12) ನಡೆದ ವಿಶ್ವಕಪ್ ಪಂದ್ಯದಲ್ಲಿ ಆತಿಥೇಯ ಭಾರತ, ಎದುರಾಳಿ ನೆದರ್ಲೆಂಡ್ಸ್ ವಿರುದ್ಧ 160 ರನ್ಗಳ ಭಾರೀ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಜೇಯ ಓಟವನ್ನು ಮುಂದುವರಿಸಿದೆ. ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನವನ್ನು ನೀಡಿತು. ಅಲ್ಲದೆ, ಇಂದಿನ ಪಂದ್ಯ ಸ್ಮರಣೀಯ ಕ್ಷಣವೊಂದಕ್ಕೆ ಸಾಕ್ಷಿಯಾಯಿತು.
ಇಂದು ವಿರಾಟ್ ಕೊಹ್ಲಿ (51) ಅರ್ಧಶತಕ ಬಾರಿಸಿ ಮಿಂಚಿದ್ದಲ್ಲದೆ, ಒಂದು ವಿಕೆಟ್ ಸಹ ಗಳಿಸಿದರು. ಗಮನಾರ್ಹ ಸಂಗತಿ ಏನೆಂದರೆ, ಬರೋಬ್ಬರಿ 9 ವರ್ಷಗಳ ಬಳಿಕ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ವಿಕೆಟ್ ಪಡೆದರು. ನಾಯಕ ರೋಹಿತ್ ಶರ್ಮ, ಕೊಹ್ಲಿಯನ್ನು ಕರೆದು ಬೌಲ್ ಮಾಡುವಂತೆ ಹೇಳಿದರು. ಪಂದ್ಯದ ಎರಡನೇ ಇನಿಂಗ್ಸ್ನ 24ನೇ ಓವರ್ ಎಸೆದ ಕೊಹ್ಲಿ ಮೂರನೇ ಎಸತದಲ್ಲಿ ನೆದರ್ಲೆಂಡ್ಸ್ ತಂಡ ಸ್ಕಾಟ್ ಎಡ್ವರ್ಡ್ ವಿಕೆಟ್ ಕಬಳಿಸಿದರು. ಚೆಂಡು ಲೆಗ್ ಸ್ಟಂಪ್ ಕೆಳಗೆ ಉರುಳಿತು ಮತ್ತು ಎಡ್ವರ್ಡ್ಸ್ ಬ್ಯಾಟ್ನಿಂದ ಔಟ್ಸೈಟ್ ಎಡ್ಜ್ ಆದ ಬಾಲನ್ನು ಕೆಎಲ್ ರಾಹುಲ್ ಮಿಂಚಿನಂತೆ ಹಿಡಿದುಕೊಂಡರು.
ವಿಕೆಟ್ ಬೀಳುತ್ತಿದ್ದಂತೆ ಕೊಹ್ಲಿ, ರಾಹುಲ್ ಮತ್ತು ರೋಹಿತ್ ಶರ್ಮ ಸಂಭ್ರಮಿಸಿದರು. ಆದರೆ, ಇದೆಲ್ಲದಕ್ಕಿಂತ ಹೆಚ್ಚು ಗಮನ ಸೆಳೆದಿದ್ದು ಕೊಹ್ಲಿ ಅವರು ಮುದ್ದಿನ ಮಡದಿ ಅನುಷ್ಕಾ ಶರ್ಮ ಸಂಭ್ರಮಾಚರಣೆ. ವಿಕೆಟ್ ಬೀಳುತ್ತಿದ್ದಂತೆ ಸ್ಟೇಡಿಯಂನಲ್ಲಿ ಕುಳಿತಿದ್ದ ಅನುಷ್ಕಾ ಶರ್ಮಾ ಎದ್ದು ನಿಂತು ಸಂಭ್ರಮಿಸಿದರು. ಅನುಷ್ಕಾ ಅವರು ಮುಖಭಾವ ಕೊಹ್ಲಿ ಅವರಿಗೂ ವಿಕೆಟ್ ಬೀಳುತ್ತಾ ಎನ್ನುವಂತಿತ್ತು. ಒಂದು ರೀತಿಯಲ್ಲಿ ಅಚ್ಚರಿಯನ್ನು ವ್ಯಕ್ತಪಡಿಸಿದರು. ಇದೀಗ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆ ವಿಡಿಯೋವನ್ನು ಕೆಳಗಿನ ಐಸಿಸಿ ಇನ್ಸ್ಟಾಗ್ರಾಂ ಖಾತೆಯಲ್ಲಿ ನೋಡಬಹುದು.
View this post on Instagram
ಪಂದ್ಯದ ವಿಚಾರಕ್ಕೆ ಬರುವುದಾದರೆ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 411ರನ್ಗಳ ಬೃಹತ್ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ಪಡೆ 47.5 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 250 ರನ್ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಟೀಮ್ ಇಂಡಿಯಾ 160 ರನ್ಗಳ ಭಾರೀ ಅಂತರದಿಂದ ಗೆಲುವಿನ ಕೇಕೆ ಹಾಕಿತು. ತಂಡದ ಪರ ಸೈಬ್ರಾಂಡ್ ಎಂಗಲ್ಬ್ರೆಕ್ಟ್ (45), ತೇಜ ನಿಡಮನೂರು (54), ಕಾಲಿನ್ ಅಕರ್ಮನ್ (35) ಹೊರತುಪಡಿಸಿದರೆ ಉಳಿದ ಯಾವೊಬ್ಬ ಬ್ಯಾಟ್ಸ್ಮನ್ ಕೂಡ ಭಾರತದ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಲಿಲ್ಲ.
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ನಿಗದಿತ 50 ಓವರ್ಗಳಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ 410 ರನ್ ಕಲೆ ಹಾಕಿತು. ಬ್ಯಾಟ್ ಹಿಡಿದು ಕ್ರೀಡಾಂಗಣಕ್ಕಿಳಿದ ಟೀಮ್ ಇಂಡಿಯಾದ ಪ್ರತಿ ಬ್ಯಾಟರ್ಗಳು ಸಹ ರನ್ ಮಾರುತವನ್ನೇ ಸೃಷ್ಟಿಸಿದರು. ರೋಹಿತ್ ಶರ್ಮ (61 ರನ್, 54 ಎಸೆತ, 8 ಬೌಂಡರಿ, 2 ಸಿಕ್ಸರ್) ಮತ್ತು ಶುಭಮಾನ್ ಗಿಲ್ (51 ರನ್, 32 ಎಸೆತ, 3 ಬೌಂಡರಿ, 4 ಸಿಕ್ಟರ್) 100 ರನ್ಗಳ ಜತೆಯಾಟದ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಸಹ ನೆದರ್ಲೆಂಡ್ಸ್ ಬೌಲರ್ಗಳನ್ನು ಕಾಡಿದರು. 56 ಎಸೆತಗಳನ್ನು ಎದುರಿಸಿದ ಕೊಹ್ಲಿ 5 ಬೌಂಡರಿ 1 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್ಗೆ ಇಳಿದ ಶ್ರೇಯಸ್ ಅಯ್ಯರ್ ( ಅಜೇಯ 128 ರನ್, 94 ಎಸೆತ, 10 ಬೌಂಡರಿ, 5 ಸಿಕ್ಸರ್) ಮತ್ತು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆ.ಎಲ್. ರಾಹುಲ್ (102 ರನ್, 64 ಎಸೆತ, 11 ಬೌಂಡರಿ, 4 ಸಿಕ್ಸರ್) ದ್ವಿಶತಕ ಜತೆಯಾಟದೊಂದಿಗೆ ಉತ್ತಮ ಇನಿಂಗ್ಸ್ ಆಡಿದರು. ನೆದರ್ಲೆಂಡ್ಸ್ ಬೌಲರ್ಗಳನ್ನು ಅಕ್ಷರಶಃ ಬೆಂಡತ್ತಿದ ಈ ಜೋಡಿ ಎರಡು ವೈಯಕ್ತಿಕ ಶತಕಗಳೊಂದಿಗೆ ಭಾರತ ತಂಡ 410 ರನ್ಗಳ ಬೃಹತ್ ಗುರಿಯನ್ನು ಮುಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಕೊನೆಯಲ್ಲಿ ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿ ಅಜೇಯರಾಗಿ ಉಳಿದರು.
ಸೆಮೀಸ್ನಲ್ಲಿ ಮುಖಾಮುಖಿಯಾಗುವ ತಂಡಗಳು
ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸಮೀಸ್ ಪ್ರವೇಶ ಪಡೆದಿದ್ದು, ನವೆಂಬರ್ 15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಸಮಿಫೈನಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ಮತ್ತು ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ನ.16ರಂದು ಕೋಲ್ಕತದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸಮಿಫೈನಲ್ನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ನ.19ಕ್ಕೆ ವಿಶ್ವಕಪ್ ಹಬ್ಬಕ್ಕೆ ವಿದ್ಯುಕ್ತ ತೆರೆ
ಎರಡೂ ಸಮಿಫೈನಲ್ಗಳಲ್ಲಿ ಗೆಲ್ಲುವ ತಂಡಗಳು ನ. 19ರಂದು ಗುಜರಾತಿನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟ್ರೋಫಿಗಾಗಿ ನಡೆಯಲಿರುವ ಅಂತಿಮ ಹಾಗೂ ಫೈನಲ್ ಪಂದ್ಯದಲ್ಲಿ ಸೆಣಸಾಡಲಿದ್ದು, ಗೆಲ್ಲುವ ತಂಡ ವಿಶ್ವಕಪ್ ಟ್ರೋಫಿಯ ಜತೆಗೆ 4 ಮಿಲಿಯನ್ ಡಾಲರ್ (33,30,89,400 ರೂಪಾಯಿ) ಬಹುಮಾನ ಮೊತ್ತವನ್ನು ಪಡೆಯಲಿದೆ. ರನ್ನರ್ ಅಪ್ ತಂಡಗಳು 2 ಮಿಲಿಯನ್ ಡಾಲರ್ ಬಹುಮಾನ ಮೊತ್ತ ಹಾಗೂ ಲೀಗ್ ಹಂತದಲ್ಲಿ ವಿಜೇತರಾದ ಪ್ರತಿ ತಂಡಕ್ಕೆ ತಲಾ 40 ಸಾವಿರ ಡಾಲರ್ ಬಹುಮಾನ ಮೊತ್ತವನ್ನು ಪಡೆಯಲಿವೆ. (ಏಜೆನ್ಸೀಸ್)