ರಾಯಚೂರು: ವಿಶ್ವಕರ್ಮ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿ ಮೀಸಲಾತಿ ಸೌಲಭ್ಯ ನೀಡುವಂತೆ ಒತ್ತಾಯಿಸಿ ಮಾ.18ರಂದು ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ವಿಶ್ವಕರ್ಮ ಸಮಾಜದಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವಕರ್ಮ ಅಭಿವೃದ್ಧಿ ನಿಗಮದ ನಿರ್ದೇಶಕ ಎಸ್.ರವೀಂದ್ರಕುಮಾರ ತಿಳಿಸಿದರು.
ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಮಾಜ ಹಿಂದುಳಿದಿದ್ದು, ಎಸ್ಟಿ ಮೀಸಲಾತಿಯಿಂದ ಸಮಾಜಕ್ಕೆ ನ್ಯಾಯ ದೊರೆಯಲಿದೆ. ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹೋರಾಟ ನಡೆಸಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಸ್ಟಿ ಪಟ್ಟಿಗೆ ಸೇರಿಸುವಂತೆ ಹಲವು ಹೋರಾಟಗಳನ್ನು ನಡೆಸಲಾಗಿದ್ದರೂ ಸರ್ಕಾರದಿಂದ ಸ್ಪಂದನೆ ದೊರೆತಿಲ್ಲ. ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ.ನಂಜುಂಡಿ ಹೋರಾಟದ ಫಲವಾಗಿ ಸರ್ಕಾರ ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸು ಮಾಡಿದೆ. ಅಧ್ಯಯನವನ್ನು ತ್ವರಿತಗತಿಯಲ್ಲಿ ನಡೆಸಬೇಕಾಗಿದೆ.
ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಸಮಾಜದ ಯುವಕರು ಪಾಲ್ಗೊಳ್ಳಲಿದ್ದು, ಸರ್ಕಾರ ಅದಕ್ಕೂ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರತರದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವಿಶ್ವಕರ್ಮ ಸಮಾಜದ ಪದಾಧಿಕಾರಿಗಳಾದ ಗುರು ಮಡ್ಡಿಪೇಟೆ, ಶ್ರೀಕಾಂತ, ಬ್ರಹ್ಮಯ್ಯ ಬಡಿಗೇರ, ವೀರೇಶ, ಅನಿಲಕುಮಾರ ಇದ್ದರು.