ತಿರುವನಂತಪುರಂ: ಇಡೀ ಕೇರಳ ರಾಜ್ಯವೇ ಕಂಬನಿ ಮಿಡಿದಿದ್ದ ಯುವ ವೈದ್ಯೆ ವಿಸ್ಮಯಾ ಸಾವಿನ ಪ್ರಕರಣದಲ್ಲಿ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿ ಇಡುವಂತೆ ವಿಸ್ಮಯಾ ಪತಿ ಹಾಗೂ ಆರೋಪಿ ಕಿರಣ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ನಿನ್ನೆ (ಡಿ.13) ವಜಾಗೊಳಿಸಿದೆ.
ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ರದ್ದು ಮಾಡಲು ಆಗುವುದಿಲ್ಲ ಎನ್ನುವ ಮೂಲಕ ನ್ಯಾಯಮೂರ್ತಿಗಳಾದ ಅಲೆಕ್ಸಾಂಡರ್ ಥಾಮಸ್ ಮತ್ತು ಸೋಫಿ ಥಾಮಸ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ತೀರ್ಪು ಬರುವವರೆಗೂ ಶಿಕ್ಷೆಯನ್ನು ಅಮಾನತಿನಲ್ಲಿಡುವಂತೆ ಆರೋಪಿ ಒತ್ತಾಯಿಸಿದ್ದನು.
ವರದಕ್ಷಿಣೆ ಕಿರುಕುಳ ತಾಳಲಾರದೇ ಪತ್ನಿ ವಿಸ್ಮಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಅಡಿಯಲ್ಲಿ ಮೇ. 24ರಂದು ಹೈಕೋರ್ಟ್ ಕಿರಣ್ ಕುಮಾರ್ಗೆ ಶಿಕ್ಷೆ ವಿಧಿಸಿತ್ತು. ಸದ್ಯ ಕಿರಣ್ನನ್ನು ಪೂಜಾಪರ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ಕಿರಣ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ (ವರದಕ್ಷಿಣೆಗಾಗಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 304 ಬಿ (ವರದಕ್ಷಿಣೆ ಸಾವು) ಮತ್ತು ವರದಕ್ಷಿಣೆ ನಿಷೇಧ ಕಾಯಿದೆ-1961 ರ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಕಿರಣ್ಗೆ ಮೂರು ಸೆಕ್ಷನ್ (ಐಪಿಸಿ 304-ಹತ್ತು ವರ್ಷ, 306-ಆರು ವರ್ಷ, 498-ಎರಡು ವರ್ಷ) ಅಡಿಯಲ್ಲಿ 18 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಎಲ್ಲ ಪ್ರಕರಣಗಳಲ್ಲಿ ಕಿರಣ್ ಒಟ್ಟಿಗೆ ಶಿಕ್ಷೆಯನ್ನು ಅನುಭವಿಸಬೇಕಾಗಿದೆ. ಇದಲ್ಲದೆ 12.5 ಲಕ್ಷ ದಂಡ ಪಾವತಿಸಬೇಕಿದೆ.
ಪ್ರಕರಣ ಹಿನ್ನೆಲೆ ಏನು?
ವಿಸ್ಮಯಾ ಆತ್ಮಹತ್ಯೆ ಪ್ರಕರಣ ಇಡೀ ಕೇರಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಗಂಡ ಕಿರಣ್ ಕುಮಾರ್ ಹಣ ದಾಹಕ್ಕೆ ಯುವ ವೈದ್ಯೆ ಸಾವಿನ ಹಾದಿ ಹಿಡಿದಳು. ಅದಕ್ಕೂ ಮುಂಚೆ ಗಂಡನ ಅಸಲಿ ಮುಖವಾಡವನ್ನು ಮೃತ ವೈದ್ಯೆ ಬಿಚ್ಚಿಟ್ಟಿದ್ದಳು. ಅಷ್ಟಕ್ಕೂ ಆಕೆಯ ಗಂಡ ಅನಾಗರಿಕನೇನಲ್ಲ. ಆದರೆ, ಆತ ಮಾಡಿದ ಕೆಲಸ ಮಾತ್ರ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು, ವೃತ್ತಿಯಲ್ಲಿ ಕೇರಳದ ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿದ್ದ. ಒಳ್ಳೆಯ ಉದ್ಯೋಗ, ಕೈತುಂಬ ಸಂಬಳ ಪಡೆಯುತ್ತಿದ್ದರೂ ಆತನ ಅತಿಯಾದ ದುರಾಸೆ ಯುವ ವೈದ್ಯೆಯ ಪ್ರಾಣವನ್ನೇ ಕಸಿದುಕೊಂಡಿತು. ಅದಕ್ಕೆ ಶಿಕ್ಷೆಯಾಗಿ ಕೇರಳ ಸರ್ಕಾರ ಆರೋಪಿಯ ಸರ್ಕಾರಿ ಕೆಲಸವನ್ನೇ ಕಸಿದುಕೊಂಡು ಕಂಬಿ ಹಿಂದೆ ತಳ್ಳಿತ್ತು.
2020ರ ಮೇ ತಿಂಗಳಲ್ಲಿ ವಿಸ್ಮಯಾ ಮತ್ತು ಕಿರಣ್ ಇಬ್ಬರು ಮದುವೆ ಆಗಿದ್ದರು. ವಿಸ್ಮಯಳ ಮದುವೆಯನ್ನ ಕುಟುಂಬಸ್ಥರು ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ದಂಪತಿ ಇಬ್ಬರೂ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು. ಆದರೆ, ಗಂಡನ ಹಣದಾಹ ಮತ್ತು ಕಿರುಕುಳ ಸಹಿಸದೇ 2021 ಜೂನ್ 21ರ ಸೋಮವಾರ ಬೆಳಗ್ಗೆ ಗಂಡನ ಮನೆಯಲ್ಲಿಯೇ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ದೇಹದ ಮೇಲೆ ಗಾಯದ ಗುರುತುಗಳಾಗಿತ್ತು. ಗಂಡನ ಹಣದಾಹಕ್ಕೆ ವಿಸ್ಮಯ ಬಲಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಸಾವಿಗೂ ಮುನ್ನ ಅಂದರೆ ಭಾನುವಾರ ರಾತ್ರಿ ವಾಟ್ಸ್ಆ್ಯಪ್ ಮತ್ತು ಫೇಸ್ಬುಕ್ನಲ್ಲಿಯೂ ಸೋದರ ಸಂಬಂಧಿ ಜತೆ ಚಾಟ್ ಮಾಡಿದ್ದ ವಿಸ್ಮಯ, ಬಹುಶಃ ಇದೇ ನನ್ನ ಕೊನೇ ಮೆಸೇಜ್ ಆಗಬಹುದು. ಗಂಡನ ಕಿರುಕುಳ ಸಹಿಸಲಾಗ್ತಿಲ್ಲ ಎಂದು ಹೇಳಿದ್ದರು. ಗಂಡ ಹಿಂಸೆ ನೀಡಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. (ಏಜೆನ್ಸೀಸ್)
ವಿಸ್ಮಯಾ ಸಾವು ಪ್ರಕರಣ: ತಿಂಗಳಿಗೆ 50 ಸಾವಿರ ಸಂಬಳ ಪಡೆಯುತ್ತಿದ್ದವನಿಗೆ ಈಗ 63 ರೂ. ದಿನಗೂಲಿ!
ಯುವ ವೈದ್ಯೆ ವಿಸ್ಮಯ ಸಾವು ಪ್ರಕರಣ: ಪತಿಗೆ 10 ವರ್ಷ ಶಿಕ್ಷೆ, 12.5 ಲಕ್ಷ ದಂಡ ವಿಧಿಸಿದ ಕೋರ್ಟ್
ಇಡೀ ರಾಜ್ಯ ಕಂಬನಿ ಮಿಡಿದಿದ್ದ ವಿಸ್ಮಯ ಸಾವು ಪ್ರಕರಣ: 9 ತಿಂಗಳ ನಂತ್ರ ಸ್ಫೋಟಕ ಆಡಿಯೋ ಬಹಿರಂಗ!
ರಾಜ್ಯವೇ ಕಂಬನಿ ಮಿಡಿದಿದ್ದ ವಿಸ್ಮಯ ಸಾವು ಪ್ರಕರಣ: ಆರೋಪಿ ಮುಖದಲ್ಲಿ ನಗು, ಅನೇಕರ ಮನಸ್ಸಲ್ಲಿ ಬೇಸರ
a