More

    ಸುಸ್ಥಿರ ದೇಶ ಕಟ್ಟಲು ಮತ ಚಲಾಯಿಸಿ; ಸಿಇಒ ರಿಶಿ ಆನಂದ

    ವಿಜಯಪುರ: ನಾವು ಚಲಾವಣೆ ಮಾಡುವ ಮತ ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಸಹಾಯ ಮಾಡುತ್ತದೆ. ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ಮತ ಚಲಾಯಿಸಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ರಿಶಿ ಆನಂದ ಹೇಳಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನವ ಸ್ಪೂರ್ತಿ ಸಂಘ, ವಿಮಕ್ತ ದೇವದಾಸಿ ಪುನರ್ವಸತಿ ಯೋಜನೆ, ಏಡ್ಸ್ ಜಾಗೃತಿ ಮಹಿಳಾ ಸಂಘದ ಸಹಯೋಗದಲ್ಲಿ ಶನಿವಾರ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಮತದಾನ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

    ನಾವು ಚುನಾಯಿಸುವ ಜನಪ್ರತಿಧಿಗಳು ಆಯ್ಕೆಯಾದ ಮೇಲೆ ಆರೋಗ್ಯ, ಶಿಕ್ಷಣ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಂಡು ಸಮಾಜದ ಸಮಸ್ಯೆಗಳನ್ನು ನಿವಾರಿಸುತ್ತಾರೆ. ಈ ನಿಟ್ಟಿನಲ್ಲಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ತೊಡಗಿಸಿ ಕೊಳ್ಳುತ್ತಾರೆ. ಹಾಗಾಗಿ ಎಚ್ಚರಿಕೆ ಹಾಗೂ ಸೂಕ್ತ ರೀತಿಯಲ್ಲಿ ಉತ್ತಮ ಆಡಳಿತ ನಿರ್ಮಾಣ ಮಾಡಲು ಮತ ಚಲಾಯಿಸಿ ಎಂದು ಹೇಳಿದರು.

    ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಸಿ.ಆರ್. ಮುಂಡರಗಿ ಮಾತನಾಡಿ, ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವುದು ಸಹ ಎಲ್ಲರ ಹಕ್ಕು. ಮತದಾನದಲ್ಲಿ ಸಣ್ಣ ವ್ಯಕ್ತಿ ಹಾಗೂ ದೊಡ್ಡ ವ್ಯಕ್ತಿ ಎಂದು ವ್ಯತ್ಯಾಸ ಇಲ್ಲ. ಎಲ್ಲರ ಮತಕ್ಕೂ ಒಂದೇ ಮೌಲ್ಯವಿದೆ. ಮತಗಟ್ಟೆಗಳಲ್ಲಿ ಸಾರ್ವಜನಿಕರಿಗೆ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗುವುದೆಂದರು.

    ಜಿಪಂ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಜಿಲ್ಲೆಯ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಹಕರಿಸಬೇಕು. ಈ ನಿಟ್ಟಿನಲ್ಲಿ ಯಾರೂ ಮತದಾನದಿಂದ ಹೊರಗುಳಿಯಬಾರದು. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು. ವಿಶೇಷವಾಗಿ ಜಿಲ್ಲೆಯ ಪ್ರತಿ ಮತಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಮಹಿಳೆಯರಿಗೋಸ್ಕರ ಮಹಿಳಾ ಸ್ನೇಹಿ ಮತಗಟ್ಟೆ(ಪಿಂಕ್/ಸಖಿ ಬೂತ್)ಗಳನ್ನು ಅಲಂಕರಿಸಲಾಗಿದೆ. ಆದ್ದರಿಂದ ಎಲ್ಲ ಮಹಿಳೆಯರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿ ಎಂದರು.

    ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ಮಾತನಾಡಿದರು. ರಾಯಭಾರಿ ಸಹನಾ ಕುಡಿಗನೂರ ಪ್ರತಿಜ್ಞಾ ವಿಧಿ ಭೋದಿಸಿದರು. ಇನ್ನೋರ್ವ ರಾಯಭಾರಿ ಸಾಕ್ಷಿ ಹಿರೇಮಠ ಮತದಾನ ಜಾಗೃತಿ ಗೀತೆಗಳನ್ನು ಹಾಡಿದರು.

    ಜಿಪಂ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಜಶೇಖರ್ ಎಚ್.ದೈವಾಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರ, ಇನ್ನೋರ್ವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಸಿ ಮ್ಯಾಗೇರಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts