ಸಕಲೇಶಪುರ: ಮತ ಚಲಾಯಿಸದ ವ್ಯಕ್ತಿ, ಹಕ್ಕುಗಳನ್ನು ಕೇಳಲು ಅರ್ಹರಲ್ಲ ಎಂದು ಉಪವಿಭಾಗಾಧಿಕಾರಿ ಡಾ.ಎಂ.ಕೆ. ಶ್ರುತಿ ಹೇಳಿದರು.
ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ಗುರುವಾರ ಮತದಾನ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಬೀದಿನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕಿದೆ. ಹೀಗಾಗಿ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿದವರೇ ನಿಜವಾದ ಪ್ರಜಾಪ್ರಭುತ್ವದ ಪರಿಪಾಲಕ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.79ರಷ್ಟು ಮತ ಚಲಾವಣೆಯಾಗಿದ್ದು, ಈ ಬಾರಿ ಇದರ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಬೀದಿನಾಟಕ, ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಏ.26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕನು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಗಟ್ಟಿಗೊಳಿಸಲು ಶ್ರಮಿಸಬೇಕು ಎಂದರು.
ತಹಸೀಲ್ದಾರ್ ಮೇಘನಾ, ಇಒ ರಾಮಕೃಷ್ಣ, ಸಿಒ ರಮೇಶ್, ಜಿಲ್ಲಾ ಸ್ವೀಪ್ ಸಮಿತಿಯ ಮಾನವ್ ಇತರರು ಇದ್ದರು.