More

    ಮತದಾನ ಗೌಪ್ಯತೆ ಉಲ್ಲಂಘನೆಯಾಗಿಲ್ಲ: ಮನೋಜ್ ಕುಮಾರ್ ಮೀನಾ ಸ್ಪಷ್ಟನೆ

    ಬೆಂಗಳೂರು: ಹಿರಿಯ ನಾಗರಿಕರ ಮತದಾನದ ವೇಳೆ ಗೌಪ್ಯತೆ ಮತ್ತು ಮತದಾರರಿಗೆ ಪ್ರಭಾವ ಬೀರುವ ಯಾವುದೇ ಚಟುವಟಿಕೆ ನಡೆದಿಲ್ಲ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ಶನಿವಾರ ರಾಜಾಜಿನಗರದ ಶ್ರೀರಾಮಮಂದಿರ ವಾರ್ಡ್ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮತದಾನದ ವೇಳೆ ಮತದಾನದ ಗೌಪ್ಯತೆ ಕಾಪಾಡಿಕೊಳ್ಳಲಾಗಿಲ್ಲ ಮತ್ತು ಮತದಾರರಿಗೆ ಪ್ರಭಾವ ಬೀರಲಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಏಜೆಂಟರು ದೂರು ನೀಡಿದ್ದರು. ಈ ಕುರಿತು ತುರ್ತಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಲಾಗಿತ್ತು. ಇದನ್ನಾಧರಿಸಿ ಪರಿಶೀಲನೆ ನಡೆಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ವರದಿಯನ್ನು ಸಲ್ಲಿಸಿದ್ದರು. ಇದರಲ್ಲಿ ವಿಡಿಯೋ ಚಿತ್ರಿಕರಣ, ಛಾಯಾಚಿತ್ರಗಳ ಪರಿಶೀಲನೆ ಹಾಗೂ ಮೈಕ್ರೋ ಅಬ್ಸರ್ವರ್ ವರದಿಯ ಆಧರಿಸಿ ಮತದಾನದ ಗೌಪ್ಯತೆ ಉಲ್ಲಂಘನೆ ಆಗಿಲ್ಲ ಎಂಬುದಾಗಿ ತಿಳಿಸಿದ್ದಾರೆ.

    ಬದಲಿ ಗುರುತಿನ ಚೀಟಿ ವಿತರಣೆ:

    ಒಂದು ಮನೆಯಿಂದ ಇನ್ನೊಂದು ಮನೆಗೆ ಮತದಾನದ ಪ್ರಕ್ರಿಯೆ ಮಾಡುವಾಗ ಪಿಆರ್‌ಒ ಚುನಾವಣಾ ಗುರುತಿನ ಚೀಟಿ ಕಳೆದುಹೋಗಿದ್ದು, ಇನ್ನುಳಿದ ಪೋಲಿಂಗ್ ಅಧಿಕಾರಿಗಳು ಗುರುತಿನ ಚೀಟಿಯನ್ನು ಧರಿಸಿಕೊಂಡು ಕರ್ತವ್ಯ ನಿರ್ವಹಿಸಿದ್ದಾರೆ. ಪಿಆರ್‌ಒಗೆ ತಕ್ಷಣ ಮತ್ತೊಂದು ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಗಿದೆ. ಅಂದು ನಡೆದ ಮತದಾನದ ಸಂದರ್ಭದಲ್ಲಿ ಚುನಾವಣಾ ಕರ್ತವ್ಯಗಳನ್ನು ನಿಯಮಾನುಸಾರ ನಿರ್ವಹಿಸಿ, ಯಾವುದೇ ರೀತಿಯ ಮತದಾನ ಗೌಪ್ಯತೆಯನ್ನು ಉಲ್ಲಂಘನೆ ಮಾಡಿಲ್ಲ. ಯಾವುದೇ ಪಕ್ಷದ ಚುನಾವಣೆ ಅಭ್ಯರ್ಥಿಗಳ ಏಜೆಂಟರ್‌ಗಳ ಜೊತೆಗೂಡಿ ಮತದಾರರಿಗೆ ಪ್ರಭಾವ ಬೀರುವಂತಹ ಪ್ರಕ್ರಿಯೆಗಳು ನಡೆಯದೇ ಇರುವುದನ್ನ ವಿಡಿಯೋ ತುಣುಕುಗಳಿಂದ ಖಚಿತಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

    ಈ ಹಿನ್ನಲೆಯಲ್ಲಿ ದೂರುದಾರರು ಹೇಳಿರುವಂತೆ ಯಾವುದೇ ಮತದಾನದ ಅಧಿಕಾರಿ/ನೌಕರರು ಹಾಗೂ ಕಂದಾಯ ನಿರೀಕ್ಷಕರು ಹಾಗೂ ಮೈಕ್ರೋ ಅಬ್ಸರ್‌ವರ್ ವಿರುದ್ದ ಕ್ರಮ ತಗೆದುಕೊಳ್ಳುವ ಅಂಶ ಕಂಡು ಬರದೇ ಇರುವುದರಿಂದ ದೂರುದಾರರ ದೂರ ಅರ್ಜಿಯನ್ನು ಮುಕ್ತಾಯಗೊಳಿಸಿದೆ ಎಂದು ಚುನಾವಣಾ ಆಯೋಗದ ಕರ್ನಾಟಕ ಸಿಇಒ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts