ಮೈಸೂರು: ವಿಆರ್ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಆನಂದ ಸಂಕೇಶ್ವರ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಸೋಮವಾರ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 17ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಆನಂದ ಸಂಕೇಶ್ವರ ಅವರಿಗೆ ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಆರ್ವಿ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ ಮತ್ತು ಬೆಂಗಳೂರಿನ ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸೇವಾ ಸಂಸ್ಥೆಯ ಉಪಾಧ್ಯಕ್ಷ ಈ.ಎಸ್.ಚಕ್ರವರ್ತಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ಆನಂದ ಸಂಕೇಶ್ವರ ಅವರು, ನನ್ನ ತಂದೆಯೇ ನನಗೆ ರೋಲ್ ಮಾಡಲ್. ನನಗೆ ಮಿಲಿಟರಿ ಟ್ರೈನಿಂಗ್ ಇದ್ದ ಹಾಗೆ. ನನ್ನ ಸಾಧನೆಗೆ ತಂದೆಯೇ ಸ್ಫೂರ್ತಿ. ಕಾಲೇಜು ವಿದ್ಯಾರ್ಥಿಯಾಗಿದ್ದಾಗಲೇ ಕೆಲಸದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಪ್ರದಾಣ ಮಾಡಿದ ಗೌರವ ಡಾಕ್ಟರೇಟ್ ಅನ್ನು ಖುಷಿಯಿಂದಲೇ ಸ್ವೀಕರಿಸಿದ್ದೇನೆ. ಗೌರವ ಡಾಕ್ಟರೇಟ್ ನನ್ನಲ್ಲಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವೆ. ವಿಆರ್ಎಲ್ ಸಮೂಹದ ಎಲ್ಲ ಸಿಬ್ಬಂದಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನೊಂದಿಗೆ ಗೌರವ ಡಾಕ್ಟರೇಟ್ ಸ್ವೀಕರಿಸಿದ ಇನ್ನಿಬ್ಬರು ಅವರವರ ಕ್ಷೇತ್ರದಲ್ಲಿ ದಿಗ್ಗಜರು. ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ವಿದ್ಯುನ್ಮಾನ, ಮಾಹಿತಿ ತಂತ್ರಾನ ಮತ್ತು ಜೈವಿಕ ತಂತ್ರಾಜ್ಞಾನ ಇಲಾಖೆಯ ನಿರ್ದೇಶಕ ಎ.ಬಿ.ಬಸವರಾಜು ಘಟಿಕೋತ್ಸವ ಭಾಷಣ ಮಾಡಿದರು. ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಉಪಸ್ಥಿತರಿದ್ದರು. ಘಟಿಕೋತ್ಸವದಲ್ಲಿ 31 ಸಂಶೋಧನಾ ಅಭ್ಯರ್ಥಿಗಳಿಗೆ ಪಿಎಚ್ಡಿ ಪದವಿ, 48 ಮಂದಿಗೆ ಚಿನ್ನದ ಪದಕ, 38 ಅಭ್ಯರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. 8,338 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಯಿತು.
100 ಅಡಿಗೆ ತಲುಪಿದ ಕೆಆರ್ಎಸ್ ನೀರಿನ ಮಟ್ಟ: ಸದ್ಯ ಕುಡಿವ ನೀರಿಗೆ ತೊಂದರೆ ಇಲ್ಲ
https://www.vijayavani.net/a-increase-in-electric-vehicle-explosion-case-ola-returned-1401-scooters/
ಎಫ್ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು