More

    ವಿಎಸ್‌ಕೆಯು 11ನೇ ಘಟಿಕೋತ್ಸವ, ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್

    ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಜು.13ರ ಬೆಳಗ್ಗೆ 10ಕ್ಕೆ ವಿಶ್ವ ವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿದ್ದು ಪಿ. ಅಲಗೂರು ತಿಳಿಸಿದರು.

    ಇದನ್ನೂ ಓದಿ: ಘಟಿಕೋತ್ಸವದಂದೇ ರಾಸಿಯು ಲೋಪದೋಷ ಖಂಡಿಸಿ ವಿದ್ಯಾರ್ಥಿಗಳ ಧರಣಿ

    ಇಲ್ಲಿನ ವಿಶ್ವ ವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ಅಧ್ಯಕ್ಷ ಡಾ.ಜೆ.ಕೆ.ಬಜಾಜ್ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರಲಿದ್ದಾರೆ ಎಂದರು.

    53 ಚಿನ್ನದ ಪದಕ ಪ್ರದಾನ

    ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಒಟ್ಟು 123 ವಿದ್ಯಾರ್ಥಿಗಳು ರ‌್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.

    ಸ್ನಾತಕ ಪದವಿಯಲ್ಲಿ ಒಟ್ಟು 12,423 ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 1,712ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮೂವರು ತಲಾ 3 ಹಾಗೂ ಐವರು ವಿದ್ಯಾರ್ಥಿಗಳು ತಲಾ ಎರಡು ಚಿನ್ನದ ಪದಕ ಪಡೆಯಲಿದ್ದಾರೆ ಎಂದು ತಿಳಿಸಿದರು.

    ಮೂರು ಮಂದಿಗೆ ಗೌರವ

    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರಾಯಚೂರು ಜಿಲ್ಲೆಯ ಕವಿತಾಳದ ಕವಿತಾ ಮಿಶ್ರಾ, ಸಮಾಜ ಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಿ.ಹಿರೇಹಾಳ್ ಗ್ರಾಮದ ಡಿ.ಹಿರೇಹಾಳ್ ಇಬ್ರಾಹಿಂ (ಮರಣೋತ್ತರ) ಮತ್ತು ಸಂಗೀತ ಕ್ಷೇತ್ರದ ಅನನ್ಯ ಸಾಧನೆಗೆ ಬಳ್ಳಾರಿ ಜಿಲ್ಲೆಯವರಾದ ಹಿಂದುಸ್ತಾನಿ ಗಾಯಕ ಎಂ.ವೆಂಕಟೇಶ್ ಕುಮಾರ್‌ಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಕವಿತಾ ಮಿಶ್ರಾ

    ಇವರು ಧಾರವಾಡದಲ್ಲಿ 1977ರಲ್ಲಿ ಜನಿಸಿದರು. ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮದಲ್ಲಿ ಮಹತ್ತರ ಸಾಧನೆಗೈದಿದ್ದು, ಬಹು ಬೆಳೆ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಮತ್ತು ಪರಿಸರ ಸ್ನೇಹಿ ವಿಚಾರಗಳನ್ನು ತಿಳಿದು ಅದನ್ನು ಕಾರ್ಯರೂಪಕ್ಕೆ ತರುವುದರ ಜತೆ-ಜತೆಗೆ ಹೈನುಗಾರಿಕೆ ಮತ್ತು ಕೃಷಿ ನರ್ಸರಿ ಪ್ರಾರಂಭಿಸಿರುತ್ತಾರೆ. ಸುಸ್ಥಿರ ಕೃಷಿ ಬಗ್ಗೆ ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿರುವ ಇವರಿಗೆ ಅತ್ಯುತ್ತಮ ರೈತ ಪ್ರಶಸ್ತಿ, ಗೋಲ್ಡ್ ಪ್ರಶಸ್ತಿ, ಅತ್ಯುತ್ತಮ ತೋಟಗಾರಿಕಾ ಪ್ರಶಸ್ತಿ, ಕೃಷಿ-ಋಷಿ ಪ್ರಶಸ್ತಿ, ರಾಣಿ ಚನ್ನಮ್ಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿವೆ.

    ದಿ.ಹಿರೇಹಾಳ್ ಇಬ್ರಾಹಿಂ

    ದಿ.ಹಿರೇಹಾಳ್ ಇಬ್ರಾಹಿಂ ಅವರು 1931ರಲ್ಲಿ ದಂಡಿ ಹೀರೆಹಾಳ್‌ದಲ್ಲಿ ಜನಿಸಿದರು. ಸಾಹಿತ್ಯ ಮತ್ತು ಧಾರ್ಮಿಕ ಸಾಮರಸ್ಯಕ್ಕೆ ಅಪಾರ ಕೊಡುಗೆ ನೀಡಿರುವ ಅವರು, ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ರ್ಯ ಹೋರಾಟಗಾರರು. ಶಿವಮೊಗ್ಗದಲ್ಲಿ ನಡೆದ 49ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಮತ್ತು ಸಾಂಸ್ಕೃತಿಕ ಸಮಿತಿ ನೇತೃತ್ವ ವಹಿಸಿದ್ದರು. ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು, ಶಿವಮೊಗ್ಗದಲ್ಲಿ ಜೀವನ ಸಂಜೆ ಎಂಬ ವೃದ್ಧಾಶ್ರಮ ಸ್ಥಾಪಿಸಿದ್ದಾರೆ. ಮುಸ್ಲಿಂ ಪ್ರವಚನಗಳನ್ನು ಕನ್ನಡಕ್ಕೆ ಅನುವಾದಿಸಿರುವ ಇಬ್ರಾಹಿಂ, ಕೋಮು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

    ಪಂಡಿತ್ ಎಂ.ವೆಂಕಟೇಶ್ ಕುಮಾರ್

    ಹೆಸರಾಂತ ಹಿಂದುಸ್ತಾನಿ ಗಾಯಕ ಪಂಡಿತ್‌ಎಂ.ವೆಂಕಟೇಶ್ ಕುಮಾರ್, ಬಳ್ಳಾರಿ ಜಿಲ್ಲೆಯ ಲಕ್ಷ್ಮಿಪುರದಲ್ಲಿ 1953ರಲ್ಲಿ ಜನಿಸಿದರು. ಅವರು ಪಂಡಿತ್ ಪುಟ್ಟರಾಜ ಗವಾಯಿಗಳ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿ ಪಡೆದಿದ್ದಾರೆ ಹಾಗೂ ಕರ್ನಾಟಕ ಕಾಲೇಜಿನ ಸಂಗೀತ ವಿಭಾಗದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ದಾಸರ ಪದಗಳು ಹಾಗೂ ವಚನಗಳ ಗಾಯನದ ಮೂಲಕ ಮನೆಮಾತಾಗಿರುವ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಗೌರವ ಡಾಕ್ಟರೇಟ್ ಪದವಿ, ವಚನ ಸಾಹಿತ್ಯಶ್ರೀ ಪ್ರಶಸ್ತಿ ಮತ್ತು 2016ರಲ್ಲಿ ಕೇಂದ್ರ ಸರ್ಕಾರ ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

    ಹೊಸ ಕಟ್ಟಡಗಳ ಉದ್ಘಾಟನೆ

    ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ಡ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸೇರಿದಂತೆ ಹೊಸ ಕಟ್ಟಡಗಳ ಉದ್ಘಾಟನಾ ಸಮಾರಂಭ ಜು.13ರ ಬೆಳಗ್ಗೆ 10ಕ್ಕೆ ವಿಶ್ವ ವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿದೆ.

    ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಘಾಟಿಸುವರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಲೋಕಸಭೆ ಸದಸ್ಯ ವೈ.ದೇವೇಂದ್ರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಸಿದ್ದು ಅಲಗೂರು ತಿಳಿಸಿದರು. ಕುಲಸಚಿವ ಪ್ರೊ.ಎಸ್.ಸಿ.ಪಾಟೀಲ್, ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts