ಮೈಸೂರು: ಕೆ. ಸಾಲುಂಡಿ ಗ್ರಾಮದ ಜನರು ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿರುವ ಮೂರು ಕೊಳವೆ ಬಾವಿಗಳಿಂದ ನೀರು ಪೂರೈಕೆ ಸ್ಥಗಿತಗೊಳಿಸಿ ಮೈಸೂರು ನಗರ ಪಾಲಿಕೆ ವತಿಯಿಂದ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
ಪ್ರತಿಯೊಬ್ಬರು ನೀರನ್ನು ಕುದಿಸಿ ತಣಿಸಿದ ನಂತರ ಸೇವಿಸಬೇಕು ಎಂದು ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಗ್ರಾಮದಲ್ಲಿ ಅಶುಚಿತ್ವ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಬೋಗಾದಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಗ್ರಾಮಕ್ಕೆ ಭೇಟಿ ನೀಡಿ ಚರಂಡಿಗಳನ್ನು ಶುಚಿಗೊಳಿಸಿ ನೀರು ಸುಗಮವಾಗಿ ಹರಿದು ಹೋಗುವಂತೆ ಮಾಡುತ್ತಿದ್ದಾರೆ. ಗ್ರಾಮದ ಎಲ್ಲ ಕಡೆಗಳಲ್ಲಿ ಔಷಧ ಸಿಂಪರಣೆ ಮಾಡಲಾಗಿದೆ.