ಬೆಂಗಳೂರು : ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ. ರಾಜ್ಯಕ್ಕೆ ಜೆಡಿಎಸ್ ಕೊಡುಗೆ ಅಪಾರವಾಗಿದೆ. ಮುಂದಿನ ದಿನಗಳಲ್ಲಿ ಇದನ್ನ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ. ನಾವು ಕ್ವಾರಂಟೇನ್ನಲ್ಲಿ ಇಲ್ಲ. ಬೀದಿಗಿಳಿದು ಹೋರಾಟ ನಡೆಸುತ್ತಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಲಿದೆ. ನಿತ್ಯಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕರೊನಾ ಸಮಯದಲ್ಲಿ ಜನರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಹೊರೆ ಹೊರಿಸಲಾಗಿದೆ. ಇದನ್ನು ವಿರೋಧಿಸಿ ಸೋಮವಾರ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದು ನಿಖಿಲ್ ಹೇಳಿದರು.
ಇದನ್ನೂ ಓದಿ: ಎಲ್ಲ ತಾಲೂಕುಗಳಲ್ಲಿ ಮಕ್ಕಳಿಗೆ ವಿಶೇಷ ಆಸ್ಪತ್ರೆ ; ಕಂದಾಯ ಸಚಿವ ಆರ್.ಅಶೋಕ್ ಭರವಸೆ
ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಕಿತ್ತಾಟ ಆರಂಭವಾಗಿದೆ. ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ. ಆದರೆ ಇದು ಚರ್ಚೆ ಮಾಡುವ ಸಂದರ್ಭವೇ ಅಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಕುಟುಕಿದರು.
ಪ್ರತಿಭಟನಾ ರಾಲಿ : ಜೂ.28 ರ ಸೋಮವಾರ ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ನಿಂದ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ನಗರದ ಜೆಪಿ ಭವನದಲ್ಲಿ ಬೆಂಗಳೂರು ಜಿಲ್ಲೆಯ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆಯಲ್ಲಿ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಇ.ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: ವಿಸ್ಟಾಡೋಮ್ ಕೋಚ್ಗೆ ಚಾಲನೆ! ಪಶ್ಚಿಮ ಘಟ್ಟಗಳ ಸೌಂದರ್ಯ ಸವಿಯುತ್ತಿರುವ ಪ್ರಯಾಣಿಕರು
ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಹೆಚ್.ಕೆ.ಕುಮಾರಸ್ವಾಮಿ ಅವರು ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿವೆ. ದಿನೇ ದಿನೇ ತೈಲ ಬೆಲೆ ಗಗನಕ್ಕೇರಿದ್ದು, ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇದರ ವಿರುದ್ಧ ನಮ್ಮ ಪಕ್ಷವು ಹೋರಾಟ ನಡೆಸಲಿದೆ. ಸೋಮವಾರ ಬೆಂಗಳೂರಿನಲ್ಲಿ ಬೆಳಗ್ಗೆ ೧೧ ಗಂಟೆಗೆ ಜೆಪಿ ಭವನದಿಂದ ಪಾದಯಾತ್ರೆ ನಡೆಸುತ್ತೇವೆ. ಮೌರ್ಯವೃತ್ತದ ಗಾಂಧಿ ಪ್ರತಿಮೆವರೆಗೂ ಈ ರಾಲಿ ನಡೆಯಲಿದ್ದು, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ ಎಂದರು.