ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳಾದ ಇಡಿ ಹಾಗೂ ಸಿಬಿಐ ವಶದಲ್ಲಿರುವ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಪಾತ್ರದ ಕುರಿತು ಸಲ್ಲಿಸಿರುವ ಸಾಕ್ಷ್ಯಾಧಾರಗಳು ಎಲ್ಲಿವೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಎಸ್.ವಿ.ಎನ್ ಭಟ್ಟಿ ಅವರಿದ್ದ ಪೀಠವೂ ತನಿಖಾ ಸಂಸ್ಥೆಗಳಾದ ಇಡಿ ಹಾಗೂ ಸಿಬಿಐ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಬಿಜೆಪಿಯೊಂದಿಗಿನ ಮೈತ್ರಿ ಕಡಿತ; ಕೊನೆಗೂ ಮೌನ ಮುರಿದ ಎಐಎಡಿಎಂಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳು ಎಲ್ಲಿವೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ಪಾತ್ರ ಏನಿದೆ ಎಂದು ಪ್ರಶ್ನಿಸಿದ ನ್ಯಾಯಾಲಯವು, ಹಣ ಸ್ವೀಕರಿಸಿರುವುದಕ್ಕೆ ಪ್ರಮುಖ ಪುರಾವೆಗಳೇನು ಎಂದು ತನಿಖಾ ಸಂಸ್ಥೆಯನ್ನು ಪ್ರಶ್ನಿಸಿದೆ. ಸಿಸೋಡಿಯಾ ವಿರುದ್ಧ ದಿನೇಶ್ ಅರೋರಾ ಹೇಳಿಕೆಯನ್ನು ಹೊರತುಪಡಿಸಿದರೆ ಬೇರೆ ಯಾವುದಾದರೂ ಪುರಾವೆಗಳಿದೆಯೇ ಎಂದು ಕೇಳಿದೆ.
100 ಹಾಗೂ 30 ಕೋಟಿ ರೂಪಾಯಿ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಈವರೆಗೂ ಸಲ್ಲಿಸಿಲ್ಲ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರು ಭಾಗಿಯಾಗಿರುವುದು ತೋರುತ್ತಿಲ್ಲ. ಅವರನ್ನು ಏಕೆ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಲಾಗಿದೆ ಎಂದು ನ್ಯಾಯಾಲಯ ತನಿಖಾ ಸಂಸ್ಥೆಗಳಾದ ಇಡಿ ಹಾಗೂ ಸಿಬಿಐಅನ್ನು ಪ್ರಶ್ನಿಸಿದೆ.