ಸೊರಬ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಲೋಕಸಭಾ ಚುನಾವಣೆಗೆ ಕೆ.ಇ.ಕಾಂತೇಶ್ಗೆ ಟಿಕೆಟ್ ನೀಡುವ ಭರವಸೆ ನೀಡಿದ್ದು ಸತ್ಯವೋ ಅಥವಾ ಸುಳ್ಳೋ ಎಂಬುದು ಜನತೆಗೆ ತಿಳಿಯಬೇಕು. ಹಾಗಾಗಿ ಚಂದ್ರಗುತ್ತಿ ಶ್ರೀ ರೇಣುಕಾಂಬೆ ಸನ್ನಿಧಿಯಲ್ಲಿ ಮಾತ್ರವಲ್ಲ ಅಯೋಧ್ಯೆಯಲ್ಲೂ ಗಂಟೆ ಹೊಡೆದು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ಅವರು ಸಹ ಪ್ರಮಾಣ ಮಾಡಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಕೆ.ಇ.ಕಾಂತೇಶ್ಗೆ ಲೋಕಸಭಾ ಚುನಾವಣೆ ಟಿಕೆಟ್ ನೀಡುವ ಜತೆಗೆ ಪ್ರಚಾರಕ್ಕೂ ಬರುವುದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು. ಆದರೆ ನಂತರ ದಿನದಲ್ಲಿ ನುಡಿದಂತೆ ನಡೆಯಲಿಲ್ಲ. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ಹಿಂದುತ್ವದ ಪರವಾಗಿ ಧ್ವನಿ ಎತ್ತುವವರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ನನ್ನ ಸ್ಪರ್ಧೆ ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಮತ್ತು ಹಿಂದು ಪರ ಹೋರಾಟಗಾರರಿಗೆ ನ್ಯಾಯ ದೊರಕಿಸಿಕೊಡಲು ಎಂದು ಸ್ಪಷ್ಟಪಡಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರ ಸವಾಲನ್ನು ಸ್ವೀಕರಿಸಿದ್ದೇನೆ ಎಂದರು.
ಸಂಸದ ಪ್ರತಾಪ್ ಸಿಂಹ, ಬಸವನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ ಸೇರಿ ಅನೇಕ ಮುಖಂಡರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ. ಹಿಂದುತ್ವದ ಪರ ಧ್ವನಿ ಎತ್ತುವ ಹೋರಾಟಗಾರರಿಗೆ ಬಿಎಸ್ವೈ ಮಣೆ ಹಾಕುತ್ತಿಲ್ಲ. ಈ ಹಿಂದೆ ಕೇಂದ್ರದ ಮುಖಂಡರು ಹಾಗೂ ಜಿಲ್ಲಾ ಮುಖಂಡರು ನನ್ನ ಮನವೊಲಿಸುವ ಪ್ರಯತ್ನ ಮಾಡಿದರು. ಸ್ಪರ್ಧಿಸುವ ದೃಢ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. 12ರಂದು ನಾಮಪತ್ರ ಸಲ್ಲಿಕೆ ವೇಳೆ 250 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಕೆ.ಪ್ರಭಾಕರ ರಾಯ್ಕರ್ ಮಾತನಾಡಿ, ಜನಸಂಘ ಕಾಲದಿಂದಲೂ ಪಕ್ಷಕ್ಕೆ ನಿಷ್ಠರಾಗಿ ದುಡಿದ ಸಾವಿರಾರು ಕಾರ್ಯಕರ್ತರಿದ್ದಾರೆ. ಅನೇಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಂತು ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತದೆ. ಇದರಿಂದ ಬೇಸತ್ತು ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಚರ್ಚಿಸಿ ಕೆ.ಎಸ್. ಈಶ್ವರಪ್ಪ ಅವರಿಗೆ ಬೆಂಬಲ ನೀಡುವ ತಿರ್ಮಾನ ಕೈಗೊಂಡಿರುವುದಾಗಿ ತಿಳಿಸಿದರು.
ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್, ಗೋ ಸಂರಕ್ಷಣಾ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಜೆ.ಎಸ್.ಚಿದಾನಂದ ಗೌಡ, ಬಜರಂಗದಳ ಮಾಜಿ ತಾಲೂಕು ಸಂಚಾಲಕ ಅಣ್ಣಪ್ಪ, ಉದ್ರಿ ಗ್ರಾಪಂ ಮಾಜಿ ಉಪಾಧ್ಯಕ್ಷ ಪರಮೇಶ್ವರಪ್ಪ, ಪಪಂ ಮಾಜಿ ಸದಸ್ಯ ಮಹೇಶ್ ಗೌಳಿ, ಬಂಗಾರಪ್ಪ ಕಾತುವಳ್ಳಿ, ಎಂ.ಪಿ. ರಾಘವೇಂದ್ರ, ಗಣಪತಿ ಬಂಕಸಾಣ, ಲೋಕೇಶ್ ಸೇರಿದಂತೆ ಇತರರಿದ್ದರು.