ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮುಂದಿನ ಮೂರು ದಿನ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಕೊಡಗು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ ನ.25ರವರೆಗೆ ಹೆಚ್ಚು ಮಳೆ ಬೀಳುವ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಇದನ್ನೂ ಓದಿ: ಕೃಷಿ ಮೇಳದಲ್ಲಿ ಮಿಂದೆದ್ದ 15.67 ಲಕ್ಷ ಮಂದಿ: ಅದ್ದೂರಿ ತೆರೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನ.24, ನ.25ರಂದು ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರದಲ್ಲಿ ನ.25ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹಿಂಗಾರು ಕ್ಷೀಣಗೊಂಡ ಪರಿಣಾಮ ಅ.1ರಿಂದ ನ.20ರವರೆಗೆ ವಾಡಿಕೆಯಂತೆ 165 ಮಿಮೀ ಮಳೆ ಆಗಬೇಕಿತ್ತು. ಆದರೆ, 99 ಮಿಮೀ ಮಳೆ ಬಿದ್ದಿತ್ತು, ಶೇ.40 ಕೊರತೆ ಉಂಟಾಗಿದೆ.