ಕೊಪ್ಪ: 2014ರಲ್ಲಿ ಬಿಜೆಪಿ ನೀಡಿದ ಭರವಸೆಗಳನ್ನು ಈಡೇರಿಸಿದ್ದು, ನಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಈ ಬಾರಿ ಕ್ಷೇತ್ರದಲ್ಲಿ ಮತ್ತೆ ಗೆಲುವು ಪಡೆಯಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮೃದ್ಧ ,ಶಕ್ತಿಶಾಲಿ, ಸಮರ್ಥ ಭಾರತ ನೋಡಲು ಸಾಧ್ಯವಾಗಿದೆ. ಕಾಶ್ಮೀರದಲ್ಲಿ 370 ಕಾಯ್ದೆ ರದ್ದು, ರಾಮ ಮಂದಿರ ನಿರ್ಮಾಣ, ಸೌರಶಕ್ತಿ ಮೂಲಕ ವಿದ್ಯುತ್, ಜಲ ಜೀವನ ಯೋಜನೆ ಮೂಲಕ ಪ್ರತಿ ಮನೆಗೆ ನೀರು, ಸ್ಪಚ್ಛ ಭಾರತ್ ಯೋಜನೆ ಮೂಲಕ 10ಕೋಟಿ ಶೌಚಗೃಹ ನಿರ್ಮಾಣ ಮಾಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲೋಕಸಭಾ ಕ್ಷೇತ್ರದ 1,900 ಮತಗಟ್ಟೆಗಳಲ್ಲಿ ಕಾರ್ಯಕರ್ತರು ಉತ್ಸಹದಿಂದ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಘೋಷಣೆ ನಂತರ ಕಾರ್ಯಕರ್ತರಲ್ಲಿ ಉತ್ಸಹ ಬಂದಿದೆ. ಈ ಬಾರಿ ದೊಡ್ಡ ಅಂತರದಿಂದ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಗೆಲವು ಪಡೆಯಲಾಗುವುದು ಎಂದರು.
ಈ ಹಿಂದೆ ಕೇಂದ್ರ ಸರ್ಕಾರ ಹಳದಿ ಎಲೆ ರೋಗಕ್ಕೆ ಔಷಧಿ ಕಂಡುಹಿಡಿಯಲು ಅನುದಾನ ಬಿಡುಗಡೆ ಮಾಡಿತ್ತು. ಕಸ್ತೂರಿರಂಗನ್ ವರದಿಯಿಂದ ಮಲೆನಾಡು ಹಾಗೂ ಕರಾವಳಿ ಜನತೆಗೆ ಸಮಸ್ಯೆಯಾಗದಂತೆ ಸರ್ಕಾರ ಎಚ್ಚರ ವಹಿಸಿತ್ತು. ಮುಂದೆ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ನ ಅಭ್ಯರ್ಥಿ ಬಗ್ಗೆ ನಮಗೆ ಗೊತ್ತಿಲ್ಲ. ನಾವು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದರು. ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಡಿ.ಎನ್.ಜೀವರಾಜ್, ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಂಡಲ ಅಧ್ಯಕ್ಷ ದಿನೇಶ್ ಹೊಸೂರು, ಎಸ್.ಎನ್ ರಾಮಸ್ವಾಮಿ, ಸತೀಶ್ ಅದ್ದಡ, ಶೃಂಗೇರಿ ಶಿವಣ್ಣ ಇದ್ದರು.