ಶನಿವಾರಸಂತೆ: ಹಲವಾರು ವರ್ಷಗಳ ಮಹಿಳೆಯರ ಹೋರಾಟದ ಫಲವಾಗಿ ವಿಶ್ವ ಮಹಿಳಾ ದಿನ ಆಚರಿಸಲಾಗುತ್ತಿದೆ ಎಂದು ನಾವು ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕಿ ಸುಮನಾ ಗೌತಮ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಲೂರು ಸಿದ್ದಾಪುರ ವಲಯ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಆಲೂರು ಸಿದ್ದಾಪುರ ವೈಭವ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಯರು ಪುರುಷರಷ್ಟೇ ಸರಿ ಸಮಾನಳು. ಹಲವು ಶತಮಾನಗಳಿಂದ ಲಿಂಗ ತಾರತಮ್ಯತೆ, ಅಬಲೆ ಮುಂತಾದ ಕಾರಣದಿಂದ ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿಯಲು ಕಾರಣವಾಯಿತು. ಮಹಿಳೆಯರಿಗೆ ಮತದಾನದ ಹಕ್ಕು ಸಹ ಇರಲಿಲ್ಲ ಈ ಎಲ್ಲ ಕಾರಣಗಳಿಂದ ಮಹಿಳೆಯರ ಹೋರಾಟದ ಫಲವಾಗಿ 1975 ರಲ್ಲಿ ಅಧಿಕೃತವಾಗಿ ವಿಶ್ವ ಮಹಿಳಾ ದಿನವನ್ನು ವಿಶ್ವ ಮಟ್ಟದಲ್ಲಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣಾನಂದ್ ಮಾತನಾಡಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆಯರು ಮತ್ತಷ್ಟು ಸಬಲರಾಗಬೇಕಿದ್ದು ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ವಿದ್ಯಾವಂತರಾಗಬೇಕು. ಅದೇ ರೀತಿಯಲ್ಲಿ ಪಾಲಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಬೆಂಗಳೂರಿನ ಸ್ತ್ರೀರೋಗ ತಜ್ಞೆ ಡಾ.ಶಾಂತಲಾ ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. ಆಲೂರು ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾವು ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಗೌತಮ್, ಕಾರ್ಯಕರ್ತೆ ಬಿ.ಕೆ.ಕುಮಾರಿ, ವಿವಿಧ ಕಡೆಯ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಇತರರು ಇದ್ದರು.
ಮಹಿಳಾ ದಿನಾಚರಣೆ ಪ್ರಯುಕ್ತ ಆಶಾ ಕಾರ್ಯಕರ್ತೆಯರು, ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.