ಮೈಸೂರು: ಸಂವಿಧಾನದಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಿದ್ದರಿಂದ ಇಂದು ಮಹಿಳೆಯರು ಎಲ್ಲ ಕ್ಷೇತ್ರಳಗಲ್ಲಿಯೂ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು.
ಬೋಗಾದಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-1ರಲ್ಲಿ ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮಹಾಬೆಳಕು ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತೀಯ ಸಂವಿಧಾನ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ದಿನಾಚರಣೆಯನ್ನು ಪ್ರತಿಯೊಬ್ಬ ಪುರುಷರನ್ನು ಸೇರಿಸಿಕೊಂಡು ಹಬ್ಬವಾಗಿ ಆಚರಣೆ ಮಾಡಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರು ಸ್ವಾವಲಂಬಿಗಳಾಗಲು ಸಹಕಾರಿಯಾಗಿದೆ ಎಂದರು.
ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಲ್ಲಿ ಶೇ.33 ಮೀಸಲಾತಿ ನೀಡಿದ್ದರಿಂದ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಕೆಲಸ ಮಾಡುತ್ತಿದ್ದಾರೆ. ಆಡಳಿತ ಚುಕ್ಕಾಣಿ ಹಿಡಿದು ಆಳ್ವಿಕೆ ಮಾಡುತ್ತಿದ್ದಾರೆ. ಆದರೂ ಮಹಿಳೆಯರಿಗೆ ಸಿಗಬೇಕಾದಷ್ಟು ಸ್ವಾತಂತ್ರೃ, ಸಮಾನತೆ ಸಿಕ್ಕಿಲ್ಲ ಎಂದರು.
ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲ ಸವಲತ್ತುಗಳನ್ನು ನೀಡಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಗುರಿ ಇಟ್ಟುಕೊಂಡು ಸಾಧನೆ ಮಾಡಿ. ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ. ನಾವು ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು. ಪ್ರಯತ್ನ ಮಾಡಿ ಯಶಸ್ಸು ಗಳಿಸಿ ಸಂವಿಧಾನ ಪುಸ್ತಕಗಳನ್ನು ಎಲ್ಲರೂ ಓದಿಕೊಂಡು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿದರು.
ಮಾಜಿ ಉಪಮೇಯರ್ ಪುಷ್ಪವಲ್ಲಿ, ಹಿರಿಯ ನಿಲಯಪಾಲಕರಾದ ಎಚ್.ಸಿ. ಪವಿತ್ರಾ, ಸಿಬ್ಬಂದಿ ಜಿ.ಕೆ. ಮೋಹನ್, ಕಾತ್ಯಾಯಿನಿ, ಯಶೋಮಿತ್ರ, ಸ್ಫೂರ್ತಿ, ಧನಲಕ್ಷ್ಮೀ, ಅನುಷಾ ಇತರರು ಇದ್ದರು.
