ಮೈಸೂರು: ಆದಾಯ ತೆರಿಗೆ(ಐಟಿ), ಜಾರಿ ನಿರ್ದೇಶನಾಲಯ(ಇಡಿ) ಮೂಲಕ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿದ್ದಾರೆ. ಅವರಿಗೆ ಗಾಯದ ಮೇಲೆ ಉಪ್ಪು ಸುರಿದ ಹಾಗೆ ಆಗಿದೆ. ರಾಜ್ಯದಲ್ಲಿ ನರೇಂದ್ರ ಮೋದಿ ಪರವಾದ ಅಲೆ ಇಲ್ಲ. ಮೋದಿ ಮುಖ ನೋಡಿ ಯಾರೂ ವೋಟ್ ಹಾಕ್ತಿಲ್ಲ ಎಂದು ಕುಟುಕಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನಮನ್ನಣೆ ಗಳಿಸಿವೆ. ಈಗಾಗಲೇ ನಾಲ್ಕು ಗ್ಯಾರಂಟಿಗಳು ಜನರನ್ನು ತಲುಪಿವೆ. ಇದು ಬಿಜೆಪಿಯವರ ನಿದ್ದೆ ಕೆಡಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಐಟಿ, ಇಡಿ ಸಂಸ್ಥೆಗಳನ್ನು ತಮ್ಮ ಅಣತೆಯಂತೆ ಬಳಸಿಕೊಳ್ಳುತ್ತಿದ್ದಾರೆ. ಸುಖಾ ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸರ್ಕಾರದ ವಿರುದ್ಧ ವೈಎಸ್ಟಿ, ಎಸ್ಎಸ್ಟಿ ಟ್ಯಾಕ್ಸ್ ಕುರಿತು ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾವು ಎಚ್ಡಿಕೆ ಟ್ಯಾಕ್ಸ್ ಅಂತ ಹೆಸರು ಕೊಡಬಹುದು. ಅವರ ರಾಜಕೀಯ ನಡೆ ಬಗ್ಗೆ ಜನರಿಗೆ ಗೊತ್ತಿದೆ. ಹಳೇ ಮೈಸೂರು ಭಾಗದಲ್ಲಿ ಅವರ ಅವಕಾಶವಾದಿ ರಾಜಕಾರಣ ಎಲ್ಲರಿಗೂ ತಿಳಿದಿದೆ ಎಂದು ತಿರುಗೇಟು ನೀಡಿದರು.
‘ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ’ ಎಂದಿದ್ದರು. ಇದೀಗ ಅವರೇ ಪದೇ ಪದೇ ಹೋಗಿ ಮೋದಿ ಅವರನ್ನು ಭೇಟಿ ಮಾಡುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರನ್ನು ಬಿಟ್ಟು ಕುಟುಂಬ ರಾಜಕಾರಣ ಮಾಡ್ತಾರೆ. ಇಂತಹವರು ಕಾಂಗ್ರೆಸ್ ಬಗ್ಗೆ ಆರೋಪ ಮಾಡ್ತಾರೆ ಎಂದು ಜರಿದರು.