ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ಜನಸಾಮಾನ್ಯರಲ್ಲಿ ಕ್ಯಾನ್ಸರ್ನ ಬಗ್ಗೆ ಇರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ಕುಮಾರ್ ಹೇಳಿದರು.
ನಗರದ ತಾಲೂಕು ಕಚೇರಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಪ್ರಯುಕ್ತ ವಾಕಥಾನ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರಗಳು ಹಾಗೂ ಚಿಕಿತ್ಸೆಗಳು ದೊರೆಯುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಕ್ಯಾನ್ಸರ್ ವಿರುದ್ಧ ಹೋರಾಡಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುರಳಿ ಮೋಹನ್ ಮಾತನಾಡಿ, ಕ್ಯಾನ್ಸರ್ನ ಗುಣಲಕ್ಷಣಗಳನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಹಚ್ಚುವುದರಿಂದ, ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದಾಗಿದೆ. ಜನರು ಮದ್ಯಪಾನ ಮತ್ತು ಧೂಮಪಾನ ತ್ಯಜಿಸಿ, ನಿತ್ಯ ವ್ಯಾಯಾಮ ಮತ್ತು ಪೌಷ್ಟಿಕ ಆಹಾರ ಸೇವನೆಯತ್ತ ಗಮನವಹಿಸಬೇಕು. ದೈನಂದಿನ ಕೆಲಸಗಳ ಒತ್ತಡ ನಿರ್ವಹಣೆ ಮಾಡುವುದು ಹಾಗೂ ಪರಿಸರ ಮಾಲಿನ್ಯವಾಗದಂತೆ ಕ್ರಮವಹಿಸಬೇಕು. ಕ್ಯಾನ್ಸರ್ನ ಬಗ್ಗೆ ಇರುವ ಭಯಬಿಟ್ಟು, ಹೆಚ್ಚಿನ ಮಾಹಿತಿ ಪಡೆದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ.ಶಿವಕುಮಾರ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸತೀಶ್ ಕುಮಾರ್, ಎನ್ಸಿಡಿ ವಿಭಾಗದ ಅಧಿಕಾರಿ ಡಾ.ವಿಜಯಲಕ್ಷ್ಮೀ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಶಂಕರ್, ಚಲಂಕುಮಾರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ರವಿಕುಮಾರ್ ಇದ್ದರು.