More

    ಹೃದ್ರೋಗ ತಡೆಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ ಕರೆ

    ಶಿವಮೊಗ್ಗ: ಉತ್ತಮ ಜೀವನಶೈಲಿ ಮತ್ತು ಆರೋಗ್ಯದ ಅರಿವು ಸೇರಿದಂತೆ ಹೃದ್ರೋಗ ತಡೆಯುವ ಎಲ್ಲ ರೀತಿಯ ಕ್ರಮ ವಹಿಸುವ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಕರೆ ನೀಡಿದರು.
    ಬಿ.ಎಚ್.ರಸ್ತೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ವಿಶ್ವ ಹೃದಯ ದಿನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ, ಐಎಂಎ(ಭಾರತೀಯ ವೈದ್ಯಕೀಯ ಸಂಘ) ಮತ್ತು ಜಿಲ್ಲಾ ಸೈಕಲ್ ಕ್ಲಬ್ ಸಹಯೋಗದಲ್ಲಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೃದ್ರೋಗಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ ಹೃದ್ರೋಗದ ಕುರಿತು ಎಲ್ಲರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ತುಂಬಾ ಅಗತ್ಯವಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.
    ಡಿಎಚ್‌ಒ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ, ಹೃದ್ರೋಗ ಮತ್ತು ಪಾರ್ಶ್ವವಾಯು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲು ಪ್ರತಿ ವರ್ಷ ಸೆ.29ರಂದು ವಿಶ್ವ ಹೃದಯ ದಿನ ಆಚರಿಸಲಾಗುತ್ತದೆ. ಈ ವರ್ಷ ಹೃದಯಕ್ಕಾಗಿ ಹೃದಯ ಬಳಸಿ ಘೋಷಣೆಯೊಂದಿಗೆ ಆಚರಿಸಲಾಗುತ್ತಿದ್ದು ಹೃದ್ರೋಗ ಮತ್ತು ಪಾರ್ಶ್ವವಾಯು ರೋಗಗಳಿಗೆ ತಂಬಾಕು ಸೇವನೆ, ಅನಾರೋಗ್ಯಕರ ಆಹಾರ ಅಭ್ಯಾಸಗಳು, ದೈಹಿಕ ಚಟುವಟಿಕೆ ಇಲ್ಲದ ಜೀವನಶೈಲಿ ಪ್ರಮುಖ ಪಾತ್ರ ಕಾರಣ ಎಂದರು.
    ವಿಶ್ವ ಆರೋಗ್ಯ ಸಂಸ್ಥೆ ವರದಿ ಪ್ರಕಾರ ಅಸಾಂಕ್ರಾಮಿಕ ರೋಗಗಳಿಂದ ಶೇ.68ರಷ್ಟು ಜನ ಮರಣ ಹೊಂದುತ್ತಿದ್ದಾರೆ. ಅದರಲ್ಲೂ ಹೃದ್ರೋಗ, ಕ್ಯಾನ್ಸರ್, ಮಧುಮೇಹ ಪ್ರಮುಖ ಕಾರಣವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮದಡಿ 30 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಉಪಕೇಂದ್ರ-ಪ್ರಾಥಮಿಕ ಆರೋಗ್ಯ ಕೇಂದ್ರ-ಸಮುದಾಯ ಆರೋಗ್ಯ, ಕೇಂದ್ರ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ನೀಡಲಾಗುತ್ತದೆ ಎಂದರು.
    ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಓ.ಮಲ್ಲಪ್ಪ ಮಾತನಾಡಿ, ಶೇ.25ರಿಂದ 30ರಷ್ಟು ಜನರು ಹೃದ್ರೋಗದಿಂದ ಸಾವನ್ನಪ್ಪುತ್ತಿದ್ದು ನಂ.1 ಮಾರಣಾಂತಿಕ ಕಾಯಿಲೆಯಾಗಿದೆ. ದೈಹಿಕ ಮತ್ತು ಮಾನಸಿಕ ಒತ್ತಡ ಜೀವನಶೈಲಿ, ಚಟುವಟಿಕೆ ರಹಿತ ಜೀವನ, ಬೊಜ್ಜು, ಮಾದಕ ವ್ಯಸನ ಸೇರಿದಂತೆ ಅನೇಕ ಕಾರಣಗಳಿಂದ ಹೃದ್ರೋಗ ಸೇರಿದಂತೆ ಅಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದೆ ಎಂದರು.
    ಜನರು ತಂಬಾಕು ಸೇರಿದಂತೆ ಮಾದಕ ವ್ಯಸನದಿಂದ ದೂರ ಇರಬೇಕು. ಶಿಸ್ತುಬದ್ಧ ಜೀವನ ಶೈಲಿ ರೂಢಿಸಿಕೊಳ್ಳಬೇಕು. ದೈಹಿಕ ಚಟುವಟಿಕೆಗಳಾದ ನಡಿಗೆ, ಯೋಗ ಇತ್ಯಾದಿ ವ್ಯಾಯಾಮಗಳನ್ನು ನಿಯಮಬದ್ಧವಾಗಿ ಮಾಡಬೇಕು. ಆರೋಗ್ಯಕರ ಆಹಾರ ಪದ್ಧತಿ, ಸೊಪ್ಪು ತರಕಾರಿ, ಋತುಮಾನಕ್ಕೆ ತಕ್ಕಂತಹ ಹಣ್ಣು-ತರಕಾರಿ ಬಳಸಬೇಕು. ಆರೋಗ್ಯವಾಗಿದ್ದರೂ ವರ್ಷಕ್ಕೆರಡು ಬಾರಿ ಆರೋಗ್ಯ ತಪಾಸಣೆ ಮಾಡಿಸಬೇಕು. ಪ್ರಾಥಮಿಕ ಹಂತದಲ್ಲೇ ರೋಗ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಪಡೆದು ಉತ್ತಮ ಜೀವನ ತಮ್ಮದಾಗಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
    ಡಿಟಿಒ ಡಾ. ದಿನೇಶ್, ಐಎಂಎ ಅಧ್ಯಕ್ಷ ಡಾ. ಅರುಣ್, ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಜಿ.ವಿಜಯ್‌ಕುಮಾರ್, ಕ್ಲಬ್‌ನ ಸದಸ್ಯರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts