More

    ಜಲಮೂಲಗಳ ಅಸ್ತಿತ್ವ ಉಳಿಸಿ

    ಕುಶಾಲನಗರ: ಜಲ ಮೂಲಗಳ ಅಸ್ತಿತ್ವವನ್ನು ಉಳಿಸಿ, ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಮನವಿ ಮಾಡಿದರು.

    ವಿಶ್ವಜಲ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಪುರಸಭೆ ಸಹಕಾರದೊಂದಿಗೆ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ, ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ತಂಡಗಳ ಸಹಯೋಗದೊಂದಿಗೆ ನಡೆದ ತಾವರೆಕೆರೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪ್ರಸಕ್ತ ದಿನಗಳಲ್ಲಿ ಹಲವು ಕಾರಣಗಳಿಂದ ಕೆರೆಗಳ ನಾಶ ಉಂಟಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಮೂಲಕ ತಮ್ಮನ್ನು ಸಮಾಜದಲ್ಲಿ ತೊಡಗಿಸಿಕೊಳ್ಳಬೇಕು. ಚುನಾವಣೆ ಪ್ರಕ್ರಿಯೆ ನಂತರ ಪಟ್ಟಣ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಬಗ್ಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

    ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್‌ಕುಮಾರ್ ಮಾತನಾಡಿ, ಜಲ ದಿನಾಚರಣೆಯ ಬಗ್ಗೆ ಹಾಗೂ ನೀರಿನ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ತಾವರೆಕೆರೆ ಸುತ್ತಮುತ್ತ ಬೆಳೆದು ನಿಂತಿದ್ದ ಪೊದೆ, ಕುರುಚಲು ಗಿಡ ಹಾಗೂ ತ್ಯಾಜ್ಯವನ್ನು ತೆರವುಗೊಳಿಸುವ ಶ್ರಮದಾನ ನಡೆಯಿತು.

    ಸಮೀಪದ ವಾಣಿಜ್ಯ ಕಟ್ಟಡಗಳಿಂದ ಕೆರೆಗೆ ನೇರವಾಗಿ ಹರಿಯುತ್ತಿದ್ದ ಕಲುಷಿತ ನೀರಿನ ತಡೆಗೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲೆ ಲಿಖಿತಾ, ಆಡಳಿತ ಅಧಿಕಾರಿ ಮಹೇಶ್, ಎನ್‌ಎಸ್‌ಎಸ್ ಅಧಿಕಾರಿ ಮಂಜೇಶ್, ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಶ್ರೀನಾಥ್, ಪುರಸಭೆಯ ಆರೋಗ್ಯಾಧಿಕಾರಿ ಉದಯಕುಮಾರ್, ಮೋಹನ್‌ಕುಮಾರ್, ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಪ್ರಮುಖರಾದ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಕೊಡಗಿನ ಹರ್ಷ, ಡಿ.ಆರ್.ಸೋಮಶೇಖರ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ, ಶೌರ್ಯ ತಂಡದ ಕಾರ್ಯಕರ್ತರು, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts