ಬೀದರ್: ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷತೆಯಲ್ಲಿನ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಮೇಲೆ ಶುಕ್ರವಾರ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ನಗರದ ಬಸವೇಶ್ವರ ವೃತ್ತ ಹತ್ತಿರದ ಬ್ಯಾಂಕ್ಗೆ ಹದಿನೈದಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ತೆಲಂಗಾಣ, ಯಾದಗಿರಿ, ಕಲಬುರಗಿಯಿಂದ ಐಟಿ ಅಧಿಕಾರಿಗಳ ತಂಡ ಬಂದಿದೆ.
ಬ್ಯಾಂಕ್ನ ಸಿಬ್ಬಂದಿಗಳ ಮೊಬೈಲ್ ಬಂದ್ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರದ ನಿಯಮ ಗಾಳಿಗೆ ತೂರಿ ಸಾಲ ನೀಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಕಾಂಗ್ರೆಸ್ ಅಭ್ಯರ್ಥಿ. ಸಚಿವರ ಸಹೋದರ ಅಮರ ಖಂಡ್ರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ. ಕಳೆದ ಅಕ್ಟೋಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಉಮಾಕಾಂತ ನಾಗಮಾರಪಳ್ಳಿ ಪೆನಾಲ್ಗೆ ಸೋಲಿಸಿ ಖಂಡ್ರೆ ಬ್ಯಾಂಕ್ ಸಾರಥ್ಯ ವಹಿಸಿಕೊಂಡಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬ್ಯಾಂಕ್ ಮೇಲೆ ಐಟಿ ದಾಳಿ ನಡೆದಿದ್ದು ಕುತೂಹಲ ಮೂಡಿಸಿದೆ.