ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ರವಿಕುಮಾರ್ ದಹಿಯಾ, ಸಾಕ್ಷಿ ಮಲಿಕ್, ಒಲಿಂಪಿಯನ್ ವಿನೇಶ್ ಪೂಗಟ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಲವು ವರ್ಷಗಳಿಂದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ನಡೆಸುತ್ತಿದ್ದಾರೆ ಎಂದು ವಿನೇಶ್ ಪೂಗಟ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಉತ್ತರ ಪ್ರದೇಶದ ಲಖನೌದ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತುದಾರರು ಮಹಿಳಾ ಕುಸ್ತಿಪಟುಗಳನ್ನು ಶೋಷಿಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ, ಆರೋಪಗಳ ತನಿಖೆಗಾಗಿ ಸರ್ಕಾರವು ಮೂರು ಸದಸ್ಯರ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬ್ರಿಜ್ ಭೂಷಣ್ ಅವರನ್ನು ಸ್ಥಾನದಿಂದ ಕೆಳಗಿಳಿಸುವಂತೆ ಕುಸ್ತಿಪಟುಗಳು ಒತ್ತಾಯಿಸಿದ್ದು, ಈಗಾಗಲೇ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಕ್ರೀಡಾ ಸಚಿವರು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದಾರೆ. ಮೂಲಗಳ ಪ್ರಕಾರ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಕುಸ್ತಿ ಫೆಡರೇಶನ್, ಕ್ರೀಡಾ ಸಚಿವಾಲಯಕ್ಕೆ ಮಧ್ಯಾಹ್ನ 3 ಗಂಟೆಯೊಳಗೆ ಪ್ರತಿಕ್ರಿಯೆಯನ್ನು ಕಳುಹಿಸಲಿದೆ.
ತಮ್ಮ ವಿರುದ್ಧ ಬಂದಿರುವ ಆರೋಪವನ್ನು ಬ್ರಿಜ್ ಭೂಷಣ್ ತಳ್ಳಿ ಹಾಕಿದ್ದು, ಎಲ್ಲ ಆರೋಪಗಳು ಆಧಾರರಹಿತ ಎಂದಿದ್ದಾರೆ. ಯಾರ ಕರುಣೆಯಿಂದಲೂ ನಾನು ಆ ಸ್ಥಾನದಲ್ಲಿ ಕುಳಿತಿಲ್ಲ. ಸಾರ್ವಜನಿಕರಿಂದ ಆಯ್ಕೆಯಾಗಿದ್ದಾನೆ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.
ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬ ಭರವವಸೆಯನ್ನು ಹಲವಾರು ಕುಸ್ತಿಪಟುಗಳು ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಒಲಿಂಪಿಕ್ಸ್ ಅಸೊಸಿಯೇಷನ್ಗೆ ದೂರು ನೀಡಿರುವ ಪ್ರತಿಭಟನಾ ನಿರತ ಕುಸ್ತಿಪಟುಗಳು, ನಾಲ್ಕು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಆದರೆ, 4 ಬೇಡಿಕೆಗಳು ಈ ಕೆಳಕಂಡಂತಿವೆ.
1. ಆರೋಪದ ಬಗ್ಗೆ ತನಿಖೆ ನಡೆಸಲು ತಕ್ಷಣ ಸಮಿತಿಯೊಂದನ್ನು ರಚಿಬೇಕು
2. ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ ಪಡೆಯಬೇಕು
3. ಭಾರತೀಯ ಕುಸ್ತಿ ಒಕ್ಕೂಟವನ್ನು ವಿಸರ್ಜಿಸಬೇಕು
4. ಕುಸ್ತಿಪಟುಗಳೊಂದಿಗೆ ಸಮಾಲೋಚನೆ ನಡೆಸಿ ಭಾರತೀಯ ಕುಸ್ತಿ ಒಕ್ಕೂಟವನ್ನು ನಡೆಸಲು ಸಮಿತಿಯನ್ನು ರಚಿಸಬೇಕು
ಪ್ರತಿಭಟನೆ ಆರಂಭವಾಗಿ ಮೂರು ದಿನಗಳು ಕಳೆದರೂ ಬ್ರಿಜ್ ಭೂಷಣ್ ವಿರುದ್ಧ ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಕುಸ್ತಿಪಟುಗಳು ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ, ಅನೇಕ ಪ್ರತಿಪಕ್ಷಗಳ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಆರೋಪ ಬಂದರೂ ಕ್ರಮವಹಿಸದೇ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದು ದೂರಿದ್ದಾರೆ. (ಏಜೆನ್ಸೀಸ್)
ಕೆಲಸಕ್ಕೆಂದು ಹೋಗಿ ಕುವೈತ್ನಲ್ಲಿ ಸಿಲುಕಿ ಪರದಾಡುತ್ತಿರುವ ಮಹಿಳೆ: ನೆರವಿಗೆ ಮುಂದಾದ ಕೊಡಗು ಜಿಲ್ಲಾಡಳಿತ
‘ಕರ್ನಾಟಕ ಕೇಂದ್ರದ ಪಾಲಿಗೆ ಎರಡನೇ ದರ್ಜೆಯ ರಾಜ್ಯವೇ?’ ಎಂದು ಪ್ರಶ್ನಿಸಿದ ಗುಂಡೂರಾವ್