ಯಲಬುರ್ಗಾ: ಇತ್ತೀಚಿನ ದಿನಮಾನಗಳಲ್ಲಿ ನಾಡಿನ ಮಹಿಳೆಯರು ಸಾಕ್ಷರರಾಗುವುದರ ಜತೆಗೆ ಸ್ವಾವಲಂಬಿಗಳಾಗಿ ಬದುಕುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಂಕ್ರಪ್ಪ ಅಂಗಡಿ ಹೇಳಿದರು.
ತಾಲೂಕಿನ ಮುಧೋಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆ ಪುರುಷರಷ್ಟೇ ಸಮಾನಳು ಎಂಬಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾ ಬಂದಿದ್ದಾಳೆ. ಪಾಲಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕೆ.ಶಿವಪ್ರಸಾದ ಅಧ್ಯಕ್ಷತೆ ವಹಿಸಿದ್ದರು.