ಯಲಬುರ್ಗಾ: ಕರೊನಾ ಕರ್ಫ್ಯೂ ನೆಪ ಮಾಡಿಕೊಂಡು ಅಗತ್ಯ ವಸ್ತುಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕ ಬದಿಯುದ್ದಿನ್ ಅಹ್ಮದ್ ಹೇಳಿದರು.
ಪಟ್ಟಣದ ನ್ಯಾಯ ಬೆಲೆ ಮತ್ತು ಕಿರಾಣಿ ಅಂಗಡಿಗಳಿಗೆ ಶನಿವಾರ ಭೇಟಿ ನೀಡಿ ಮಾತನಾಡಿದರು. ಕಿರಾಣಿ ಅಂಗಡಿ ಮಾಲೀಕರು ಅಗತ್ಯ ವಸ್ತುಗಳ ದರ ಏರಿಕೆ ಮಾಡಿರುವ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ವರ್ತಕರು ನಿಗದಿತ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡಬೇಕು. ಗ್ರಾಹಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ಮತ್ತು ಪರಸ್ಪರ ಅಂತರ ಕಾಯ್ದುಕೊಳ್ಳಲು ವರ್ತಕರು ಸಲಹೆ ನೀಡಬೇಕು ಎಂದರು. ಪಟ್ಟಣದ ವಿವಿಧ ದಿನಸಿ ಅಂಗಡಿಗಳಿಗೆ ಭೇಟಿ ನೀಡಿ ದರ ತಪಾಸಣೆ ನಡೆಸಿದರು.