ಉಗರಗೋಳ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಆನಂದ ಮಾಮನಿ ಭರವಸೆ ನೀಡಿದ್ದಾರೆ.
ತಮ್ಮ ಜನ್ಮದಿನದ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಶನಿವಾರ ಭೇಟಿ ನೀಡಿ, ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಯಲ್ಲಮ್ಮನ ಆಶೀರ್ವಾದದಿಂದ 3 ಸಲ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ 22.5 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಶೀಘ್ರ ಹಣ ಬಿಡುಗಡೆಯಾಗಲಿದೆ. 2020-21ರ ಬಜೆಟ್ನಲ್ಲಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಪಡೆಯಲಾಗುವುದು. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಸವದತ್ತಿಯ ನೂಲಿನ ಗಿರಣಿ ಹಾಗೂ ಜೋಗುಳಬಾವಿ ಮುಖ್ಯರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ, ಸವದತ್ತಿ ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಚಿತ್ತರಗಿ, ಚನ್ನಮ್ಮ ಕಿತ್ತೂರು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಶಿವಾನಂದ ಮಾಸ್ತಿಹೊಳಿ, ಯಲ್ಲಮ್ಮ ದೇವಸ್ಥಾನದ ಅರ್ಚಕರಾದ ಏಕನಗೌಡ ಮುದ್ದನಗೌಡ್ರ, ಕೊಳ್ಳಪ್ಪಗೌಡ ಗಂದಿಗವಾಡ, ಅಲ್ಲಮಪ್ರಭು ಪ್ರಭುನವರ ಇತರರಿದ್ದರು.
ಜನ್ಮ ದಿನದಂದು ಹಾರೈಸಿ ಪ್ರೋತ್ಸಾಹಿಸಿದ ಅಭಿಮಾನಿಗಳು, ಕಾರ್ಯಕರ್ತರ ಪ್ರೀತಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕ್ಷೇತ್ರದ ಜನರಿಗೋಸ್ಕರ ದುಡಿಯುತ್ತೇನೆ.
| ಆನಂದ ಮಾಮನಿ ಶಾಸಕ