ಹುಬ್ಬಳ್ಳಿ: ಕೊಲೆ ಕೇಸ್ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಪ್ರಕಟಿಸಿದೆ.
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆಯಾಗಿತ್ತು. ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಿರುವ ಸಿಬಿಐ, ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪದ ಮೇರೆಗೆ ಗುರುವಾರ ಬೆಳಗ್ಗೆ ಬಂಧಿಸಿ ಸಂಜೆವರೆಗೂ ವಿಚಾರಣೆಗೆ ಒಳಪಡಿಸಿತ್ತು. ಬಳಿಕ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿ ವಿನಯ್ ಕುಲಕರ್ಣಿಯನ್ನು ಶುಕ್ರವಾರ ಸಂಜೆವರೆಗೂ(24 ತಾಸು) ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು. ಅದರಂತೆ ಆರೋಪಿಯನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಲಾಗಿತ್ತು.
ಹೆಚ್ಚಿನ ತನಿಖೆಗಾಗಿ ತನ್ನ ಕಸ್ಟಡಿಗೆ ಆರೋಪಿ ವಿನಯ್ ಕುಲಕರ್ಣಿಯನ್ನು ನೀಡುವಂತೆ ಸಿಬಿಐ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದ್ದರು. ಸಿಬಿಐ ಅರ್ಜಿಗೆ ವಿನಯ್ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ಬೆಳಗ್ಗೆ ವಾದ-ವಿವಾದ ಆಲಿಸಿದ್ದ ನ್ಯಾಯಾಲಯ, ತೀರ್ಪು ಕಾಯ್ದಿರಿಸಿತ್ತು. ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ವಿನಯ್ ಕುಲಕರ್ಣಿಯನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಪಡೆಯುವಂತೆ ಸೂಚಿಸಿದರು. ನ.9ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿದರು.