ಬೆಂಗಳೂರು: ತಿರುವಿನಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲ್ಲೂಕಿನ ಜಿಗಣಿ-ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಸಾತನೂರು ನಿವಾಸಿ ಶಿವ(24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬೈಕಿನ ಹಿಂಬದಿ ಕುಳಿತಿದ್ದ ಈರಪ್ಪ ಹಾಗೂ ಆಂಧ್ರಪ್ರದೇಶ ಮೂಲದ ಟಪ್ಪಗಾರಿ ಮಚ್ಚೇಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಕುಮಾರಸ್ವಾಮಿಗೆ ಜ್ಞಾನ, ತಿಳುವಳಿಕೆ ಇರಬೇಕು; ಮಾಜಿ ಸಿಎಂ ವಿರುದ್ಧ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ
ಶಿವ, ಈರಪ್ಪ ಹಾಗೂ ಟಪ್ಪಗಾರಿ ಮಚ್ಚೇಂದ್ರ ರಾಯಲ್ ಎನ್ಫೀಲ್ಡ್ ಬೈಕಿನಲ್ಲಿ ಮರಸೂರು ಗೇಟ್ನಿಂದ ಸಾತನೂರಿನತ್ತ ತೆರಳುತ್ತಿದ್ದರು. ಜಿಗಣಿ-ಹಾರೋಹಳ್ಳಿ ಮುಖ್ಯರಸ್ತೆಯ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದ್ದು, ತೀವ್ರ ರಕ್ತಸ್ರಾವದಿಂದ ಶಿವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಈರಪ್ಪ ಹಾಗೂ ಟಪ್ಪಗಾರಿ ಮಚ್ಚೇಂದ್ರನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಇದು ಎರಡನೇ ಅಪಘಾತವಾಗಿದ್ದು, ಆಗಸ್ಟ್ 01ರಂದು ಹಾಲೋಬ್ಲಾಕ್ ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಮುಗುಚಿದ ಪರಿಣಾಮ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಜಿಗಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನೂ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.