ಬೆಂಗಳೂರು: ಕೈ ತೊಳೆಯಲು ಹೋಗಿ ಯುವಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ನರಸಿಂಹನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಉಜಿನಿ ಹೊಸಹಳ್ಳಿ ಗ್ರಾಮದ ಸುನಿಲ್ (30) ಎಮದು ಗುರುತಿಸಲಾಗಿದ್ದು, ವಿಜಿಕುಮಾರ್ ಫಾರಂನಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೊಡ್ಡಬಳ್ಳಾಪುರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು, ಮೃತ ಯುವಕ ಸುನಿಲ್ ವಿಜಿಫಾರಂನಲ್ಲಿ ಕೆಲಸ ಮಾಡುತ್ತಿದ್ದ. ಹೋಳಿ ಹಬ್ಬ ಇದ್ದ ಕಾರಣ ಸ್ನೇಹಿತರ ಜೊತೆ ಆಟವಾಡಿ ಸಂಜೆ ಆರು ಘಂಟೆ ಸುಮಾರಿಗೆ ಕೃಷಿಹೊಂಡದ ಬಳಿ ಕೈ ತೊಳೆಯಲು ಹೋಗಿದ್ದಾನೆ. ಈ ವೇಳೆ ಆತ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.