ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಮತ್ತು ಉಗ್ರರಿಗೆ ಬೆಂಬಲ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಜರ್ದಾರಿ ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ. ಇದು ಆ ದೇಶದ ಮನಸ್ಥಿತಿಯನ್ನು ತೋರುತ್ತದೆ. ತಕ್ಷಣವೇ ಜರ್ದಾರಿ ದೇಶದ ಜನತೆ ಮತ್ತು ಪ್ರಧಾನಿ ಮೋದಿ ಅವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಜರ್ದಾರಿ ಪ್ರತಿಕ್ರತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜರ್ದಾರಿ ದೇಶದ ಅಭಿವೃದ್ಧಿಯ ಹರಿಕಾರರಾಗಿರುವ ಮೋದಿ ಅವರನ್ನು ಟೀಕಿಸಿಸಿರುವುದು ಸರಿಯಲ್ಲ. ಸಮಸ್ತ ನಾಗರಿಕರ ಭಾವನೆಗೆ ಧಕ್ಕೆ ತಂದಿದ್ದು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ವಿಶ್ವ ಸಂಸ್ಥೆಗೆ ಶಿಾರಸು ಮಾಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಮಾಡಿದರು.
ಡಿಕೆಶಿ ವಿರುದ್ಧವೂ ಕಿಡಿ: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಶಂಕಿತ ಉಗ್ರ ಶಾರೀಕ್ನನ್ನು ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡು ಉಗ್ರರಿಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಉಗ್ರವಾದಿ ಸಂಘಟನೆಗೆ ಪ್ರೋತ್ಸಾಹ ನೀಡಿದ್ದಾರೆ. ಇಂತಹ ದೇಶದ್ರೋಹಿ ಹೇಳಿಕೆ ನೀಡಿದ ಡಿ.ಕೆ.ಶಿವಕುಮಾರ್ ಅವರ ಶಾಸಕತ್ವ ರದ್ದುಪಡಿಸಿ ಯುಎಪಿ ಆಕ್ಟ್ನಲ್ಲಿ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಾಸಕ ಕೆ.ಎಸ್.ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಕೆ.ಈ.ಕಾಂತೇಶ್, ಎಸ್.ದತ್ತಾತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್, ಎಸ್.ಎನ್.ಚನ್ನಬಸಪ್ಪ, ಬಳ್ಳೆಕೆರೆ ಸಂತೋಷ್, ನಾಗರಾಜ್, ರಾಮು, ಸುರೇಖಾ ಮುರಳೀಧರ್, ವಿಶ್ವನಾಥ್, ಉಮಾ, ಧೀರರಾಜ್ ಹೊನ್ನವಿಲೆ, ಸುಹಾಸ್ಶಾಸಿ, ಗಣೇಶ್ ಬಿಳಕಿ, ಅನೂಪ್ ಕುಮಾರ್, ಆರ್.ವಿ. ದರ್ಶನ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.