ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಾಗಿದ್ದ ದಿಶಾ ಸಭೆಗೆ ಆಗಮಿಸುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕುವ ಯತ್ನ ವಿಫಲವಾಗಿದೆ.
ಈರುಳ್ಳಿ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಅಲ್ಪ ಸಂಖ್ಯಾತ ವಿಭಾಗದ ಉಪಾಧ್ಯಕ್ಷೆ ನಗೀನಾ ಭಾನು ಎಂಬುವವರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈರುಳ್ಳಿ ಹಾರ ಹಾಕಲು ಯತ್ನಿಸಿದರು. ಸ್ಥಳದಲ್ಲಿ ಇದ್ದ ಪೊಲೀಸರು ಮಹಿಳೆಯನ್ನು ತಡೆದರು. ಈ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಇದೇ ವೇಳೆ ಪಕೋಡ ತಯಾರಿಸಿ ಸಾರ್ವಜನಿಕರಿಗೆ ಹಂಚಿ ಪ್ರತಿಭಟನೆ ನಡೆಸಿದರು.
ಈರುಳ್ಳಿ ಹಾರ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕಿಯರು ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.